ಕೈ-ಜೆಡಿಎಸ್ ಮೈತ್ರಿಯೊಂದು ಕಳ್ಳರ ಕೂಟ
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ರಾಜ್ಯದಲ್ಲಿ ಅಭಿವೃದ್ಧಿ ಪರ ಕೆಲಸ ಮಾಡುತ್ತಿರುವ ಬಿಜೆಪಿ ಸೋಲಿಸಲು ಈ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಆದರೆ, ಈ ಪಕ್ಷಗಳ ನಾಯಕರ ಕನಸು ನನಸಾಗುವುದಿಲ್ಲ ಎಂದು ಟೀಕಿಸಿದರು. ರಾಜ್ಯದ ಮತದಾರರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಗಳು ಬೇಡವಾಗಿವೆ. ಈ ಪಕ್ಷಗಳು ಏನೇ ಹರಸಾಹಸ ಮಾಡಿದರೂ ಆಟ ನಡೆಯುವುದಿಲ್ಲ. ಈ ಚುನಾವಣೆಯಲ್ಲಿ ಇವರಿಗೆ ಸೋಲು ಖಚಿತ ಎಂದು ಈಶ್ವರಪ್ಪ ಭವಿಷ್ಯ ನುಡಿದರು.
ಕಾಂಗ್ರೆಸ್ ಪಕ್ಷವನ್ನು ನಿತ್ಯ ಟೀಕಿಸುತ್ತಿದ್ದ ಮಾಜಿ ಪ್ರಧಾನಿ ದೇವೇಗೌಡ, ಇದೀಗ ಅದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ ಸೋಲಿಸುವುದು ಅವರ ಏಕೈಕ ಗುರಿ. ಆದರೆ, ಅದರಲ್ಲಿ ಗೌಡರು ಯಶ ಕಾಣುವುದಿಲ್ಲ ಎಂದು ವಿಶ್ವಾಸದಿಂದ ಹೇಳಿದರು. ತತ್ವ ಸಿದ್ಧಾಂತವನ್ನು ಮರೆತು ಮೈತ್ರಿ ಮಾಡಿಕೊಂಡಿರುವ ಗೌಡರು ಕೂಡಲೇ ಜನತೆಯ ಕ್ಷಮೆ ಕೋರಬೇಕು ಎಂದು ಅವರು ಆಗ್ರಹಿಸಿದ್ದಾರೆ. ಜೊತೆಗೆ ದೇವೇಗೌಡರ ಕಡುವೈರಿ ಎಂದೇ ಖ್ಯಾತಿಯಾಗಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಜೆಡಿಎಸ್ ಮೈತ್ರಿಗೆ ಹಸಿರು ನಿಶಾನೆ ತೋರಿಸಿದ್ದಾರೆ, ಇವರು ಕೂಡಾ ಜನರ ಕ್ಷಮೆಯಾಚಿಸಲಿ ಎಂದು ಒತ್ತಾಯಿಸಿದರು.
(ದಟ್ಸ್ ಕನ್ನಡ ವಾರ್ತೆ)