ಅಕ್ರಮ ಗಣಿಗಾರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ. ರೆಡ್ಡಿ ಸಹೋದರರಿಂದ ಸಾವಿರಾರು ಕೋಟಿ ಲೂಟಿಯಾಗುತ್ತಿದೆ. ಸರಕಾರಕ್ಕೆ ಮಾನ, ಮರ್ಯಾದೆ ಇದ್ದರೆ ಅರಣ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಸಿಬಿಐಗೆ ತನಿಖೆಗೆ ಒಪ್ಪಿಸಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.
ಕೇವಲ ತಮ್ಮ ಕುರ್ಚಿ ಉಳಿಸಿಕೊಳ್ಳಲು, ಅಧಿಕಾರವನ್ನು ಉಳಿಸಿಕೊಳ್ಳಲು ರಾಜ್ಯದ ಜನತೆಗೆ ದ್ರೋಹ ಮಾಡಲಾಗಿದೆ. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ನಮ್ಮ ಬಳಿ ದಾಖಲೆಗಳಿವೆ. ಅನೇಕ ವರದಿಗಳಿವೆ. ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ಸತ್ಯ . ಇಷ್ಟೆಲ್ಲಾ ಆಧಾರಗಳಿದ್ದರೂ ರಾಜ್ಯ ಸರಕಾರ ಮೌನ ವಹಿಸಿರುವುದರ ವಿರುದ್ಧ ಸಿದ್ದು ಗುಡುಗಿದರು.
ಶ್ರೀರಾಮುಲು, ಜನಾರ್ದನರೆಡ್ಡಿ ಹಾಗೂ ಸೋಮಶೇಖರ ರೆಡ್ಡಿ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಆಗ್ರಹಿಸಿದರು. ಅಕ್ರಮ ಗಣಿಗಾರಿಕೆಯಲ್ಲಿ ಮುಖ್ಯಮಂತ್ರಿಗಳು ಶಾಮೀಲಾಗಿದ್ದಾರೆ ಎಂಬ ಸಂದೇಹ ನಮಗೆ ಬರುತ್ತಿದೆ. ಸಂವಿಧಾನಬದ್ಧ ತನಿಖೆ ನಡೆಸುವಲ್ಲಿ ಸಿಎಂ ವಿಫಲರಾಗಿದ್ದಾರೆ. ರಾಜ್ಯಸರಕಾರ ಭಂಡತನ ಪ್ರದರ್ಶಿಸುತ್ತಿದೆ ಎಂದು ದೇಶಪಾಂಡೆ ಪ್ರತಿಭಟಿಸಿದರು.
ಇದೇ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಡಿ ಕೆ ಶಿವಕುಮಾರ್ ಅವರು ರಾಜ್ಯ ಸರಕಾರದ ವಿರುದ್ಧ ತಿರುಗಿಬಿದ್ದರು. ರಾಜ್ಯದ ಸಂಪತ್ತ ಲೂಟಿಯಾಗುತ್ತಿದೆ ಎಂದು ಮುಖ್ಯಮಂತ್ರಿಗಳೇ ಹೇಳಿದ್ದರು. ಇದೀಗ ಇಲ್ಲ ಎನ್ನುತ್ತಿದ್ದಾರೆ. ಮುಖ್ಯಮಂತ್ರಿಗಳು ಅಸಂಬದ್ಧ ಹೇಳಿಕೆಗಳನ್ನು ಕೊಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು ರಾಜ್ಯದ ಹಿತ ಕಾಪಾಡುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದರು. ಪ್ರತಿಭಟನೆಯಲ್ಲಿ ರಾಜ್ಯ ಸರಕಾರ ವಿದ್ಯುತ್ ದರ ಹೆಚ್ಚಿಸಿರುವ ಬಗ್ಗೆಯೂ ವಿರೋಧ ವ್ಯಕ್ತವಾಯಿತು.
ಮುಖ್ಯಮಂತ್ರಿ ಪ್ರತಿಕ್ರಿಯೆ
ಅಕ್ರಮ ಗಣಿಗಾರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ತಕ್ಷಣ ಪ್ರತಿಕ್ರಿಯೆ ನೀಡಿದ್ದಾರೆ. ಅಕ್ರಮ ಗಣಿಗಾರಿಕೆ ವಿಷಯವನ್ನು ವಿಧಾನಸಭೆ ಅಧಿವೇಷನದಲ್ಲಿ ಚರ್ಚಿಸಲಿದ್ದೇವೆ. ಸಂಪೂರ್ಣ ವಿವರಗಳನ್ನು ಸದನಕ್ಕೆ ಕೊಡುತ್ತೇನೆ. ಆ ಸಂದರ್ಭದಲ್ಲಿ ಸರಕಾರ ಪಾರದರ್ಶಕವಾಗಿ ಎಲ್ಲವನ್ನು ಸಭೆಗೆ ತಿಳಿಸಲಿದೆ ಎಂದು ಹೇಳಿದರು. ಅಕ್ರಮ ಗಣಿಗಾರಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಸಹಕರಿಸುವ ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)