ಅಕ್ರಮ ಗಣಿಗಾರಿಕೆ : ಬುದ್ದಿಜೀವಿಗಳಿಂದ ಪ್ರತಿಭಟನೆ
ಡಾ ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ನೇತೃತ್ವದಲ್ಲಿ ಧರಣಿ ನಡೆಸಲಾಯಿತು. ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ಶಿಪಾರಸ್ಸು ಮಾಡದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕ್ರಮವನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು. ಬಿಜೆಪಿ ಸರಕಾರ ಅತ್ಯಂತ ಭ್ರಷ್ಟ ಸರಕಾರವಾಗಿದೆ. ರೆಡ್ಡಿ ಸಹೋದರರು ಅಕ್ರಮ ಗಣಿಗಾರಿಕೆಯಿಂದ ಸಂಪಾದಿಸಿದ ಹಣದಲ್ಲಿ ಸರಕಾರವನ್ನು ನಿಯಂತ್ರಿಸುತ್ತಿದ್ದಾರೆ. ಯಡಿಯೂರಪ್ಪ ಅವರು ಗಣಿಧಣಿಗಳ ಕೈಗೊಂಬೆಯಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ, ಸಿಪಿಎಂ ಮುಖಂಡ ಜಿ ಎನ್ ನಾಗರಾಜ್, ಮಾಜಿ ಸಚಿವೆ ಬಿ ಟಿ ಲಲಿತಾನಾಯಕ್, ವಿಚಾರವಾದಿ ಡಾ ಜಿ ರಾಮಕೃಷ್ಣ, ಸಾಹಿತಿಗಳಾದ ಪ್ರೊ ಎಸ್ ಜಿ ಸಿದ್ಧರಾಮಯ್ಯ, ಡಾ ಬಂಜಗೆರೆ ಜಯಪ್ರಕಾಶ್, ಹಿರಿಯ ವಕೀಲ ರವಿವರ್ಮಾಕುಮಾರ್, ಪ್ರೊ ಎನ್ ವಿ ನರಸಿಂಹಯ್ಯ, ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಗ್, ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ವಿಚಾರ ವೇದಿಕೆ ಅಧ್ಯಕ್ಷ ಬಿ ಎಸ್ ಶಿವಣ್ಣ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
(ದಟ್ಸ್ ಕನ್ನಡ ವಾರ್ತೆ)