ನಿತಿನ್ ಗಡ್ಕರಿ ಕೈಲಿ ಕಮಲದ ಕೀಲಿ

ಇದಕ್ಕೂ ಮುನ್ನ ನವದೆಹಲಿಗೆ ಆಗಮಿಸಿದ ಗಡ್ಕರಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಂತರ ಬಿಜೆಪಿ ಸಂಸದೀಯ ಮಂಡಳಿಯ ಸಭೆ ಪಾಲ್ಗೊಂಡು ಚರ್ಚೆ ಅವರು ನಡೆಸಿದರು. ನಿರ್ಗಮಿತ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ನೂತನ ಅಧ್ಯಕ್ಷ ನಿತಿನ್ ಗಡ್ಕರಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪಕ್ಷದ ಸಂಸದೀಯ ಮಂಡಳಿ ಸರ್ವಾನುಮತದ ನಿರ್ಣಯದಿಂದ ನಿತಿನ್ ಗಡ್ಕರಿ ಅವರನ್ನು ರಾಷ್ಟ್ರಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗರಡಿಯಲ್ಲಿ ಪಳಗಿರುವ ಗಡ್ಕರಿ, ಆಂತರಿಕ ಕಚ್ಚಾಟದಲ್ಲಿ ಬಿಜೆಪಿ ಮಾಡಿಕೊಂಡಿರುವ ದೊಡ್ಡ ಮಟ್ಟದ ಗಾಯಕ್ಕೆ ಮಲಾಮು ಹುಡುಕುವುದು ಅವರ ಮುಂದಿರುವ ಬಹುದೊಡ್ಡ ಸವಾಲಾಗಿದೆ. ಅಲ್ಲದೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡು ಪರದಾಡುತ್ತಿರುವ ಬಿಜೆಪಿಗೆ ಶಕ್ತಿ ತುಂಬುವ ಕೆಲಸವನ್ನು ಗಡ್ಕರಿ ಆರಂಭಿಸುವ ಸಾಧ್ಯತೆ ಇದೆ.
ನಿತಿನ್ ಗಡ್ಕರಿ ಮಹಾರಾಷ್ಟ್ರದ ಸಾಮಾನ್ಯ ಮಧ್ಯಮ ವರ್ಗದ ಕುಟುಂಬದಿಂದ ಬಂದಿರುವ ವ್ಯಕ್ತಿಯಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಟ್ಟಾಳು ಆಗಿದ್ದಾರೆ. ಗಡ್ಕರಿ ವಿದ್ಯಾರ್ಥಿ ದೆಸೆಯಿಂದಲೂ ಎಬಿವಿಪಿ ಸಕ್ರಿಯ ಕಾರ್ಯಕರ್ತರಾಗಿದ್ದು, ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ, ಸಚಿವರಾಗಿ, ವಿಧಾನ ಪರಿಷತ್ ನಾಯಕ ಹುದ್ದೆ ಸೇರಿದಂತೆ ಪಕ್ಷದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
ಅಧಿಕಾರ ವಹಿಸಿಕೊಂಡು ಮಾತನಾಡಿದ ಗಡ್ಕರಿ, ಪಕ್ಷದ ಮುಖಂಡರು ನನ್ನ ಮೇಲೆ ಭರವಸೆ ಇರಿಸಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಿದ್ದು ಸಂತಸ ತಂದಿದೆ. ಪಕ್ಷದ ಹಿರಿಯರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುವೆ. ಪಕ್ಷದ ಹಿರಿಯರಾದ ಎಲ್ ಕೆ ಅಡ್ವಾಣಿ, ರಾಜನಾಥ್ ಸಿಂಗ್ ಮತ್ತು ಸುಷ್ಮಾ ಸ್ವರಾಜ್ ಅವರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುವುದಾಗಿ ಅವರು ಹೇಳಿದರು. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸೇರಿದೆ, ಇಂದು ಪಕ್ಷದ ಅತ್ಯುನ್ನತ ಸ್ಥಾನ ಸಿಕ್ಕಿದೆ. ಇದನ್ನು ಸಮರ್ಥವಾಗಿ ನಿರ್ವಹಿಸುವೆ ಎಂದು ಗಡ್ಕರಿ ವಿಶ್ವಾಸದಿಂದ ಹೇಳಿದರು.












Click it and Unblock the Notifications