ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ : ಮತ್ತೆ ಹಿನ್ನಡೆ
ಕನ್ನಡ ಮತ್ತು ತೆಲುಗು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡಲು ಕೇಂದ್ರ ಸರಕಾರ ನಿರ್ಧರಿಸಿತ್ತು. ಇದನ್ನು ವಿರೋಧಿಸಿದ ಚೆನ್ನೈ ವಕೀಲ ಆರ್ ಗಾಂಧಿ ಎಂಬುವವರು ಕನ್ನಡ ಮತ್ತು ತೆಲುಗು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡಬಾರದು ಎಂದು ಮದ್ರಾಸ್ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್ ಶಾಸ್ತ್ರೀಯ ಸ್ಥಾನಮಾನ ನೀಡುವ ಕೇಂದ್ರದ ಕ್ರಮಕ್ಕೆ ತಡೆಯಾಜ್ಞೆ ನೀಡಿತ್ತು.
ಮದ್ರಾಸ್ ಹೈಕೋರ್ಟ್ ನೀಡಿರುವ ಮಧ್ಯಂತರ ತೀರ್ಪು ಪ್ರಶ್ನಿಸಿ ಆಂಧ್ರಪ್ರದೇಶ ಭಾಷಾ ಆಯೋಗ ಮತ್ತು ಕರ್ನಾಟಕದ ದೀಪಕ್ ತಿಮ್ಮಯ್ಯ ಸುಪ್ರಿಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಾ ಕೆಜಿ ಬಾಲಕೃಷ್ಣನ್ ಹಾಗೂ ನ್ಯಾ. ವಿಎಸ್ ಚವಾಣ್ ವಿಭಾಗೀಯ ಪೀಠ ಮೇಲ್ಮನವಿಯನ್ನು ತಿರಸ್ಕರಿಸಿದೆ.
ಮದ್ರಾಸ್ ಹೈಕೋರ್ಟ್ ನಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ನಿಮ್ಮ ಸಮಸ್ಯೆಯನ್ನು ಮದ್ರಾಸ್ ಹೈಕೋರ್ಟ್ ನಲ್ಲೇ ಬಗೆಹರಿಸಿಕೊಳ್ಳಿ ಎಂದು ಕಿವಿಮಾತು ಹೇಳಿದೆ. ಈ ಮೂಲಕ ಕನ್ನಡ ಮತ್ತು ತೆಲುಗು ಭಾಷೆಗಳ ಶಾಸ್ತ್ರೀಯ ಸ್ಥಾನಮಾನದ ಪ್ರಯತ್ನಕ್ಕೆ ಹಿನ್ನಡೆಯುಂಟಾಗಿದೆ. ಕೇಂದ್ರ ಸರಕಾರ ತನ್ನ ಸಚಿವ ಸಂಪುಟದಲ್ಲಿ ಕನ್ನಡ, ತೆಲುಗು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿದೆ. ಆದರೆ, ಮದ್ರಾಸ್ ಹೈಕೋರ್ಟ್ ನೀಡುವ ತೀರ್ಪಿಗೆ ನಾವು ಬದ್ಧ ಎಂದು ಹೇಳಿ ಅಡ್ಡಗೋಡೆ ಮೇಲೆ ದೀಪವಿಟ್ಟಿದೆ.
ತಿರುವಳ್ಳುವರ್ ಪ್ರತಿಮೆ ಅನಾವಣಗೊಳಿಸಿದ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರು, ಮದ್ರಾಸ್ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯಲ್ಲಿ ಹಿಂದೆ ಪಡೆಯುವುದಾಗಿ 'ಚಿನ್ನತಂಬಿ' ಯಡಿಯೂರಪ್ಪನವರಿಗೆ ಭರವಸೆ ನೀಡಿದ್ದರು. ಅದು ಇನ್ನೂ ಭರವಸೆಯಾಗಿಯೇ ಉಳಿದಿದೆ.