ಶ್ರೀ ಕೃಷ್ಣದೇವರಾಯರ ಪಟ್ಟಾಭಿಷೇಕಕ್ಕೆ ಸಕಲ ಸಿದ್ಧತೆ
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಜನವರಿ 27ರಿಂದ 29ರವರೆಗೆ ಜನೋತ್ಸವ ಮತ್ತು ಸಾಂಸ್ಕೃತಿಕ ಉತ್ಸವ ಹಂಪಿಯಲ್ಲಿ ನಡೆಯುಲಿದ್ದು, ನಾಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸಂಗೀತ, ಭರತನಾಟ್ಯ, ಹರಿಕಥೆ, ಗಮಕ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಕವಿಗೋಷ್ಠಿ, ಹಾಸ್ಯಗೋಷ್ಠಿ, ವಿಚಾರ ಸಂಕಿರಣ, ಗ್ರಾಮೀಣ ಕ್ರೀಡಾಕೂಟ, ವಸ್ತು ಪ್ರದರ್ಶನ, ಪುಸ್ತಕ ಪ್ರದರ್ಶನಗಳನ್ನೂ ಏರ್ಪಡಿಸಲಾಗಿದೆ ಎಂದರು.
ಶ್ರೀ ಕೃಷ್ಣದೇವರಾಯರ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ನಾಡಿನ ಎಲ್ಲ ಕಲಾ ಪ್ರಕಾರಗಳ ಸುಮಾರು ಮೂರು ಸಾವಿರ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಲು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕಲಾವಿದರಿಂದಲೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಪಟ್ಟಾಭಿಷೇಕದ 500ನೇ ವರ್ಷಾಚರಣೆ ಕಾರ್ಯಕ್ರಮವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಸುಷ್ಮಾ ಸ್ವರಾಜ್ ಅವರು ಜನವರಿ 27ರಂದು ಶ್ರೀ ರವಿಶಂಕರ ಗುರೂಜಿಯವರ ಸಾನಿಧ್ಯದಲ್ಲಿ ಉದ್ಫಾಟಿಸಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧ್ಯಕ್ಷತೆವಹಿಸುವರು. ಪುರಾತತ್ವ ಇಲಾಖೆ ಹೊರತಂದಿರುವ ಪುಸ್ತಕಗಳನ್ನು ಕೇಂದ್ರ ಗೃಹಸಚಿವ ಪಿ. ಚಿದಂಬರಂ ಅವರು ಬಿಡುಗಡೆ ಮಾಡಲಿದ್ದಾರೆ ಎಂದರು.
ವಿಜಯನಗರ ಸಾಮ್ರಾಜ್ಯ ಕುರಿತು ವಿಶೇಷ ಸಂಶೋಧನೆ ನಡೆಸಿದ ಸಂಶೋಧಕರಾದ ಡಾ ಎಂ. ಚಿದಾನಂದಮೂರ್ತಿ, ಇತಿಹಾಸಕಾರರಾದ ಡಾ ಸೂರ್ಯನಾಥ್ ಕಾಮತ್, ಡಾ ಸಿಂಧಗಿ ರಾಜಶೇಖರ್, ಪುರಾತತ್ವ ಇಲಾಖೆಯ ಡಾ ಸುಂದರ್, ಪ್ರಾಚ್ಯ ಸಂಶೋಧನೆ ಇಲಾಖೆಯ ಎಸ್. ಆರ್.ರಾವ್ ಅವರನ್ನು ಲೋಕಸಭಾ ಸದಸ್ಯರಾದ ಅನಂತಕುಮಾರ್ ಅವರು ಸನ್ಮಾನಿಸಲಿದ್ದಾರೆ. ಜನವರಿ 29ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಎಲ್. ಕೆ. ಅಡ್ವಾಣಿ ಮತ್ತು ತಮಿಳುನಾಡಿನ ಮುಖ್ಯಮಂತ್ರಿ ಡಾ ಎಂ. ಕರುಣಾನಿಧಿ ಅವರು ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಪ್ರವಾಸೋದ್ಯಮ ಸಚಿವ ಜನಾರ್ಧನ ರೆಡ್ಡಿ ಅವರು ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ನಾಡಿನ ಜನತೆಗೆ ಮನವಿ ಮಾಡಿದರು.
ಉನ್ನತ ಶಿಕ್ಷಣ ಇಲಾಖೆವತಿಯಿಂದ ಹಂಪಿ ವಿಶ್ವವಿದ್ಯಾಲಯಕ್ಕೆ ಸೇರಿದ್ಲ 80 ಎಕರೆ ಮತ್ತು ಪ್ರವಾಸೋದ್ಯಮ ಇಲಾಖೆಗೆ ಸೇರಿದ 200 ಎಕರೆ ಜಮೀನಿನಲ್ಲಿ ವಸ್ತು ಪ್ರದರ್ಶನ ಹಾಗೂ ಸಂಶೋಧನಾ ಕೇಂದ್ರ ಪ್ರಾರಂಭಿಸಲಾಗುವುದು ಎಂದು ತಿಳಿಸಿದ ಉನ್ನತ ಶಿಕ್ಷಣ ಸಚಿವರಾದ ಅರವಿಂದ ಲಿಂಬಾವಳಿ ಅವರು ಈ ಸಂಬಂಧ ಇಲಾಖೆಯ ಕಾರ್ಯದರ್ಶಿಗಳು ಒಡಂಬಡಿಕೆಗೆ ಸಹಿ ಹಾಕಿದ ಪತ್ರವನ್ನು ಪ್ರವಾಸೋದ್ಯಮ ಇಲಾಖಾ ಸಚಿವರಿಗೆ ನೀಡಿದರು.