ಬೆಳಗಾವಿ ವಿಮಾನ ನಿಲ್ದಾಣ ನವೀಕರಣ
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್ಯಗಳ ವೀಕ್ಷಣೆಯ ನಂತರ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ಈ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಹಾಗೂ ನವೀಕರಣಗೊಳಿಸುವ ಕಾರ್ಯ ಪೂರ್ಣಗೊಂಡಿದ್ದು, ಆದಷ್ಟು ಬೇಗ ಸಾರ್ವಜನಿಕರಿಗೆ ಅನುಕೂಲವಾಗುವಂತೆ ವಿಮಾನಯಾನ ಸೇವೆಯನ್ನು ಪ್ರಾರಂಭಿಸಲು ಕೇಂದ್ರ ಸರಕಾರವನ್ನು ಆಗ್ರಹಿಸಿದರು.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರಾತ್ರಿ ಸಮಯದಲ್ಲಿ ವಿಮಾನ ಇಳಿಸುವ ಸೌಲಭ್ಯವನ್ನು ಸಹ ಕಲ್ಪಿಸಲಾಗಿದೆ. ರಕ್ಷಣಾ ಸಮೀಕ್ಷೆಯ ನಂತರ ಈ ಸೌಲಭ್ಯವನ್ನು ಪ್ರಾರಂಭಿಸಲಾಗುವುದು. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹವಾನಿಯಂತ್ರಿತ ಕೊಠಡಿಯನ್ನು ಸ್ಥಾಪಿಸಲಾಗಿದೆ. 3 ಹಂತದಲ್ಲಿ ತಪಾಸಣಾ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಸಿಸಿ ಟಿವಿ ಹಾಗೂ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ. ವಿಮಾನ ನಿಲ್ದಾಣದ ಹೊರಗಡೆ 50 ವಾಹನಗಳು ನಿಲ್ಲುವ (ಪಾರ್ಕಿಂಗ್) ವ್ಯವಸ್ಥೆ ಮಾಡಲಾಗಿದೆ.
ಪ್ರಸಕ್ತ ರನ್ ವೇ ಯನ್ನು ಇನ್ನು 537ಮೀಟರಿಗೆ ವಿಸ್ತರಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ 370 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯ ಸರಕಾರದಿಂದ ವಿದ್ಯುತ್, ನೀರು ಹಾಗೂ ರಕ್ಷಣಾ ವ್ಯವಸ್ಥೆಯನ್ನು ಮಾಡುವ ಭರವಸೆ ನೀಡಲಾಗಿದ್ದು, ಮುಂಬರುವ ಸಚಿವ ಸಂಪುಟದ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗುತ್ತಿದೆಯೆಂದು ಸುರೇಶ ಅಂಗಡಿ ವಿವರಿಸಿದರು.
ಕೇಂದ್ರ ಸರಕಾರ ವಿಳಂಬ ಮಾಡದೆ ಇಲ್ಲಿಂದ ವಿಮಾನಯಾನ ಸೇವೆಯನ್ನು ಪ್ರಾರಂಭಿಸಬೇಕೆಂದು ಒತ್ತಾಯಿಸಿದ ಅವರು ನಾಳೆ ತಾವು ದೆಹಲಿಗೆ ತೆರಳಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ಲ ಪಟೇಲ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಧುರೀಣರಾದ ಮುತಾಲಿಕ ದೇಸಾಯಿ, ವಿಮಾನ ನಿಲ್ದಾಣದ ನಿಯಂತ್ರಣಾಧಿಕಾರಿ ಕೆ.ಎಸ್.ಪಾಂಡಿಯನ್ ಹಾಗೂ ಹಿರಿಯ ವ್ಯವಸ್ಥಾಪಕರಾದ ಹರಿದಾಸ ಉಪಸ್ಥಿತರಿದ್ದರು.