ಪರಿಶಿಷ್ಟ ಜಾತಿ ಕುಟುಂಬ ಸಮೀಕ್ಷೆಗೆ ಅನುದಾನ
ನ್ಯಾ. ಎ.ಜೆ. ಸದಾಶಿವ ಆಯೋಗವು ಬುಧವಾರ ನಗರದ ಕರ್ನಾಟಕ ಆಡಳಿತ ಸೇವಾ ಮತ್ತು ಸಂಶೋಧನಾ ಕೇಂದ್ರದಲ್ಲಿ ಏರ್ಪಡಿಸಿದ್ದ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ತರಬೇತಿ ಕಾರ್ಯಾಗಾರವನ್ನು ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಉದ್ಘಾಟಿಸಿದ ಸಮಾಜ ಕಲ್ಯಾಣ ಸಚಿವ ಡಿ. ಸುಧಾಕರ್ ಅವರು ಮುಖ್ಯಮಂತ್ರಿಗಳ ಭಾಷಣವನ್ನು ಓದಿದರು.
ಸಂವಿಧಾನ ಮತ್ತು ಇತರ ಕಾನೂನುಗಳಡಿ ಪರಿಶಿಷ್ಟ ಜಾತಿಯವರಿಗೆ ವಿವಿಧ ಸೌಲಭ್ಯಗಳನ್ನು ಸರ್ಕಾರ ನೀಡುತ್ತ ಬಂದಿದೆ. ಆದರೆ ಕಳೆದ 15 ವರ್ಷಗಳಿಂದ ಸರ್ಕಾರದ ಸೌಲಭ್ಯಗಳ ಹಂಚಿಕೆಯಲ್ಲಿ ತಾರತಮ್ಯ ನಡೆಯುತ್ತಿದೆ ಎಂಬ ಅಭಿಪ್ರಾಯ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳ ನಡುವೆ ಮೂಡಿರುವುದು ವಿಪರ್ಯಾಸ. ಈ ಹಿನ್ನೆಲೆಯಲ್ಲಿ ಸರ್ಕಾರದ ಸೌಲಭ್ಯಗಳು ಪರಿಶಿಷ್ಟ ಜಾತಿಯ ಎಲ್ಲರನ್ನೂ ತಲುಪುತ್ತಿವೆ ಎಂಬುದರ ಅಧ್ಯಯನ ನಡೆಸಲು ನ್ಯಾ. ಎ.ಜೆ. ಸದಾಶಿವ ಆಯೋಗ ಈ ಕುಟುಂಬ ಸಮೀಕ್ಷೆ ನಡೆಸುತ್ತಿದ್ದು ರಾಜ್ಯ ಸರ್ಕಾರ ಎಲ್ಲ ರೀತಿಯ ಬೆಂಬಲ ನೀಡಲು ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಪ್ರಾಸ್ತಾವಿಕ ನುಡಿಗಳನ್ನಾಡಿದ ಆಯೋಗದ ಮುಖ್ಯಸ್ಥ ನ್ಯಾ. ಎ.ಜೆ. ಸದಾಶಿವ ಅವರು, ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಲು ಅಧಿಕಾರಿಗಳ ಸಹಕಾರ ಅಗತ್ಯವೆಂದರು. ಶತಶತಮಾನಗಳಿಂದ ತುಳಿತಕ್ಕೊಳಗಾಗಿರುವ ಪರಿಶಿಷ್ಟ ಜಾತಿಯ ಜನರ ಬದುಕಿನಲ್ಲಿ ವಿಶ್ವಾಸ ಮೂಡಿಸಿ, ಇತರ ವರ್ಗಗಳ ಮೇಲಿನ ನಂಬಿಕೆ ಹೆಚ್ಚುವಂತೆ ಮಾಡಬೇಕು. ಇದರಲ್ಲಿ ಅಧಿಕಾರಿಗಳ ಪಾತ್ರ ಮಹತ್ವಪೂರ್ಣವಾದುದು ಎಂದು ಅವರು ತಿಳಿಸಿದರು.