ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ ಅನುಷ್ಠಾನ ಶೀಘ್ರ?
ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡುತ್ತಿದ್ದ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೇತೃತ್ವದಲ್ಲಿ ನಾಡಿನ ಕನ್ನಡಪರ ಸಂಘಟನೆಗಳ ಮತ್ತು ಹಿರಿಯ ವಿದ್ವಾಂಸರ ನಿಯೋಗವೊಂದು ಇತ್ತೀಚೆಗೆ ದೆಹಲಿಗೆ ತೆರಳಿ, ಬಹುಕಾಲದಿಂದ ನೆನೆಗುದಿಗೆ ಬಿದ್ದಿರುವ ರಾಜ್ಯದ ಮುಖ್ಯ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರನ್ನು ಹಾಗೂ ವಿವಿಧ ಇಲಾಖೆಗಳ ಕಾರ್ಯದರ್ಶಿಗಳನ್ನು ಭೇಟಿ ಮಾಡಿ, ಸುದೀರ್ಘವಾಗಿ ಚರ್ಚಿಸಿದ್ದು, ಈ ನಿಟ್ಟಿನಲ್ಲಿ ಗುಣಾತ್ಮಕ ಭರವಸೆ ಕೇಂದ್ರದಿಂದ ದೊರೆತಿದೆ ಎಂದರು.
ಹುಬ್ಬಳ್ಳಿ ಮತ್ತು ಧಾರವಾಡ ನಗರಗಳ ಕುಡಿಯುವ ನೀರಿನ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸುವುದಾಗಿ ಜಲಸಂಪನ್ಮೂಲ ಸಚಿವರು ಭರವಸೆ ನೀಡಿದ್ದು, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಹಾಗೂ ಸ್ಥಳೀಯ ಭಾಷೆಗೆ ಆದ್ಯತೆ ನೀಡುವ ನಮ್ಮ ಮನವಿಗೆ ಕೇಂದ್ರ ಕಾರ್ಮಿಕ ಸಚಿವರು ತಾತ್ವಿಕವಾಗಿ ಸಮ್ಮತಿಸಿದ್ದಾರೆ ಎಂದು ತಿಳಿಸಿದರು.
ಬೆಂಗಳೂರಿನ ಎನ್ಎಸ್ಡಿಗೆ ಸ್ವಾಯತ್ತತೆ ನೀಡುವ ಬೇಡಿಕೆಯ ಹಿಂದಿರುವ ಕಳಕಳಿಯನ್ನು ತಾವು ಗೌರವಿಸಿ, ಅಗತ್ಯವಿರುವ ಕ್ರಮಕೈಗೊಳ್ಳುವ ಭರವಸೆಯನ್ನು ಕನ್ನಡ ಸಂಸ್ಕೃತಿ ಕಾರ್ಯದರ್ಶಿಗಳು ನೀಡಿದ್ದಾರೆ ಎಂದು ಅವರು ಹೇಳಿದರು.
ಭಾರತ ಸರ್ಕಾರ ರೂಪಿಸಿರುವ ಹೊಸ ಶಿಕ್ಷಣ ಕಾನೂನು ಜಾರಿಗೆ ಬಂದಿದ್ದು, ಅದು ಬರುವ ಏಪ್ರಿಲ್ 1ರಿಂದ ಅನ್ವಯವಾಗಲಿದೆ ಎಂದು ಮಾನವ ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳು ತಿಳಿಸಿದ್ದು, 1ರಿಂದ 8ನೇ ತರಗತಿಯವರೆಗೆ ಶಿಕ್ಷಣವು ಮಗುವಿನ ಮಾತೃಭಾಷೆಯಲ್ಲೇ ಇರಬೇಕೆಂದಿದೆ. ಮಾತೃಭಾಷಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ಈಗ ಎದುರಾಗಿರುವ ಕಾನೂನು ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಬಹುದು. ಇದಕ್ಕೆ ಸಹಾಯ ನೀಡಲು ನಾವು ಸಿದ್ಧ ಎಂದು ಕಾರ್ಯದರ್ಶಿಗಳು ಈ ಸಂದರ್ಭ ತಿಳಿಸಿದರು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.