ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನರೇಟರ್ ಸ್ಫೋಟ
ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳದಲ್ಲಿ ಆತಂಕ ವಾತಾವರಣ ಉಂಟಾಗಿದೆ. ಅಲ್ಲದೇ ಕ್ರೀಡಾಂಗಣದ ಸುತ್ತಮುತ್ತ ಭಾರೀ ಪ್ರಮಾಣದ ಟ್ರಾಫಿಕ್ ಜಾಮ್ ಆಗಿದೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ. ಅನಿಲ್ ಕುಂಬ್ಳೆ ವೃತ್ತದ ಬಳಿ ಇರುವ ಎಡಿಜಿಪಿ ಕಚೇರಿ ಬಳಿ ಮತ್ತೊಂದು ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಆದರೆ, ಇನ್ನೂ ಸ್ಪಷ್ಟವಾಗಿಲ್ಲ.
ಇಂದು ಸಂಜೆ (ಶನಿವಾರ) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೆಂಗಳೂರು ರಾಯಸ್ ಚಾಲೆಂಜರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಐಪಿಎಲ್ ಪಂದ್ಯ ನಡೆಯಬೇಕಿದೆ. ವಾರದ ಕೊನೆಯ ದಿನವಾಗಿದ್ದರಿಂದ ಪಂದ್ಯ ವೀಕ್ಷಿಸಲು ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ಮೈದಾನಕ್ಕೆ ಆಗಮಿಸುತ್ತಿದ್ದು, ಗೇಟ್ ನಂಬರ್ 12 ರಲ್ಲಿ ನಡೆದ ಜನರೇಟರ್ ಸ್ಫೋಟ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದೆ.
ಗಾಯಗೊಂಡಿರುವ ಮೂವರು ಪೊಲೀಸ್ ಪೇದೆಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟಕ್ಕೆ ಕಾರಣ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸಿದ್ದಾರೆ. ಘಟನೆ ಬಗ್ಗೆ ಪೊಲೀಸರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮೈದಾನದ ಸುತ್ತಲೂ ಭಾರಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದ್ದು, ಜನರನ್ನು ಹಲವು ಸುತ್ತಿನ ಪರೀಕ್ಷೆ ನಂತರ ಒಳಗೆ ಬಿಡುತ್ತಿದ್ದಾರೆ. ಗಾಯಗೊಂಡಿರುವ ಪೊಲೀಸರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.