ಇನ್ಮುಂದೆ ಕಣ್ಣೀರು ಹಾಕಲ್ಲ : ಯಡಿಯೂರಪ್ಪ
ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ಆಯೋಜಿಸಿರುವ ಸ್ವಾಭಿಮಾನಿ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ರಾಜ್ಯ ಸರಕಾರ ಹಿಂದುಳಿದ ವರ್ಗಗಳ ಏಳ್ಗೆಗಾಗಿ ಅನೇಕ ಯೋಜನೆಗಳನ್ನು ಈಗಾಗಲೇ ಪ್ರಕಟಿಸಿದೆ. ಹಿಂದುಳಿದ ವರ್ಗಗಳ ಸರ್ವತೋಮುಖ ಅಭಿವೃದ್ಧಿಗೆ ಸರಕಾರ ಬದ್ದವಾಗಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಬಜೆಟ್ ನಲ್ಲಿ 1000 ರುಪಾಯಿಗಳನ್ನು ತೆಗೆದಿರಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.
ಪ್ರತಿ ತಿಂಗಳು 2ನೇ ಶನಿವಾರ ಹಳ್ಳಿಗಳಲ್ಲಿ ಗ್ರಾಮ ವಾಸ್ತವ್ಯ ಮಾಡುವೆ. ಪ್ರತಿ ಶುಕ್ರವಾರ ಜಿಲ್ಲಾ ಕೇಂದ್ರಕ್ಕೆ ಭೇಟಿ. ಜೊತೆಗೆ ಹಿಂದುಳಿದ ವರ್ಗಗಳು ಸೇರಿದಂತೆ ರೈತರಿಗೆ ಶೇ. 6 ಬಡ್ಡಿ ದರದಲ್ಲಿ ಸಾಲ ನೀಡುವುದಾಗಿ ಯಡಿಯೂರಪ್ಪ ಘೋಷಿಸಿದರು.
ಪ್ರತಿಪಕ್ಷಗಳ ಅಸಹಕಾರದಿಂದ ಬೇಸತ್ತು ಸಾರ್ವಜನಿಕ ಸಭೆ ಸಮಾರಂಭದಲ್ಲಿ ನಾನು ಕಣ್ಣೀರು ಹಾಕಿದ್ದು. ರಾಜ್ಯದ ಹಿತಾಸಕ್ತಿಯೇ ಮುಖ್ಯವಾಗಿರುವ ನನಗೆ ಪ್ರತಿಪಕ್ಷಗಳ ರಾಜಕೀಯ, ಜನಪರ ಕೆಲಸಕ್ಕೆ ಅಡ್ಡಿಪಡಿಸುತ್ತಿರುವುದರಿಂದ ನೋವಾಗಿದೆ. ಹೀಗಾಗಿ, ಮುಖ್ಯಮಂತ್ರಿಯಾಗಿ ಜನಸೇವೆ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವ ಕೊರಗು ಇದೆ. ಮುಂದಿನ ದಿನಗಳಲ್ಲಿ ನಾನು ಕಣ್ಣೀರು ಹಾಕುವುದಿಲ್ಲ. ಬಡವರ ಕಣ್ಣೀರು ಒರೆಸುವ ಕೆಲಸ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.