ರಾಜ್ಯ ರೈತ ಸಂಘಕ್ಕೆ ಮೂವತ್ತರ ಹರೆಯ
ಈ ಸುದ್ದಿಯನ್ನು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೊಸಪೇಟೆಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲೆಯಲ್ಲಿ ಕೈಗಾರಿಕೆಗಳ ಹೆಸರಲ್ಲಿ ಸಾವಿರಾರು ಎಕರೆ ಭೂಮಿಯನ್ನು ವಶಕ್ಕೆ ತೆಗೆದುಕೊಳ್ಳುತ್ತಿರುವ ಬಿಜೆಪಿ ಸರಕಾರ, ಬಂಡವಾಳಶಾಹಿಗಳಿಗೆ ರಿಯಲ್ ಎಸ್ಟೇಟ್ ದಂಧೆಯನ್ನು ನಡೆಸಲು ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿದರು.
ರಾಜ್ಯ ಮತ್ತು ಕೇಂದ್ರ ಸರಕಾರಗಳೆರಡೂ ಕರ್ನಾಟಕದಲ್ಲಿ ವಶಪಡಿಸಿಕೊಂಡಿರುವ ಕೃಷಿ ಭೂಮಿಯ ಭೂ ಬ್ಯಾಂಕ್ನ ಸಮಗ್ರ ವರದಿಯನ್ನು ಪ್ರಕಟಿಸಬೇಕು. ಹಿಂದಿನ ಧರ್ಮಸಿಂಗ್ ಸರ್ಕಾರ ಕೈಗಾರಿಕೆಗಾಗಿ ವಶಕ್ಕೆ ತೆಗೆದುಕೊಳ್ಳಲಾದ 1 ಲಕ್ಷ ಎಕರೆ ಕೃಷಿ ಭೂಮಿಯಲ್ಲಿ 25 ಸಾವಿರ ಎಕರೆಯನ್ನು ಮಾತ್ರ ಬಳಕೆ ಮಾಡಿಕೊಂಡಿದೆ. ಉಳಿದದ್ದನ್ನು ರಿಯಲ್ ಎಸ್ಟೇಟ್ ದಂಧೆಗೆ ಬಳಿಸಿಕೊಳ್ಳಲಾಗಿದೆ ಎಂದು ನುಡಿದರು.
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಕೂಡ ಕೈಗಾರಿಕಾ ಅಭಿವೃದ್ಧಿಯ ಹೆಸರಿನಲ್ಲಿ 2 ಲಕ್ಷ ಎಕರೆ ಭೂಮಿಯನ್ನು ವಶಕ್ಕೆ ತೆಗೆದುಕೊಳ್ಳುತ್ತಿದೆ. ಬಳ್ಳಾರಿ ಜಿಲ್ಲೆಯಲ್ಲಿ ಗಣಿಗಾರಿಕೆಯಿಂದ ಪರಿಸರ ಹಾಳಾಗಿದೆ. ಇನ್ನು ಕೈಗಾರಿಕೆಗಳ ಸ್ಥಾಪನೆಯಿಂದ ಜನ ಸಾಮಾನ್ಯರು ಒಕ್ಕಲೇಳುವ ದಿನಗಳು ದೂರ ಇಲ್ಲ ಎಂದು ಚಂದ್ರಶೇಖರ್ ಹೇಳಿದರು.