'ರೆಡ್ಡಿ ಬ್ರದರ್ಸನ್ನು ಕೈಬಿಡಲು ಹಿಂಜರಿಯುವುದಿಲ್ಲ'
ನವದೆಹಲಿ, ಜು. 17 : ಅಕ್ರಮ ಗಣಿಗಾರಿಕೆಯ ಆರೋಪ ಸಾಬೀತಾದರೆ ರೆಡ್ಡಿ ಸಹೋದರರನ್ನು ಸಂಪುಟದಿಂದ ಕೈಬಿಡಲು ಹಿಂಜರಿಯುವುದಿಲ್ಲ ಮತ್ತು ಅವರ ವಿರುದ್ಧ ಕ್ರಮ ಕೈಗಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಷ್ಟ್ರದ ರಾಜಧಾನಿಯಲ್ಲಿ ಹೇಳಿದ್ದಾರೆ.
ರಾಜ್ಯದಲ್ಲಿ ಜಂಗಲ್ ರಾಜ್ ಜಾರಿಯಲ್ಲಿದೆ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿರುವ ಹಿನ್ನೆಲೆಯಲ್ಲಿ ನವದೆಹಲಿಗೆ ಧಾವಿಸಿರುವ ಯಡಿಯೂರಪ್ಪ ಶನಿವಾರ ಬೆಳಿಗ್ಗೆ ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಅವರನ್ನು ಭೇಟಿ ಮಾಡಿ ರಾಜ್ಯದ ಸ್ಥಿತಿಗತಿಗಳನ್ನು ವಿವರಿಸಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಅಕ್ರಮ ಗಣಿಗಾರಿಕೆಯನ್ನು ಲೋಕಾಯುಕ್ತ ತನಿಖೆ ಮಾಡುತ್ತಿರುವುದರಿಂದ ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಅವರು ಗೃಹಸಚಿವರಿಗೆ ತಿಳಿಸಿದರು. ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಮಿತಿಮೀರಿದ್ದು, ಸಿಬಿಐ ತನಿಖೆ ನಡೆಸಬೇಕು ಮತ್ತು ರೆಡ್ಡಿ ಸಹೋದರರನ್ನು ಸಂಪುಟದಿಂದ ಕೈಬಿಡಬೇಕು ಎಂದು ಭಾರದ್ವಾಜ್ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
ಪ್ರಧಾನ ಮಂತ್ರಿ ಡಾ. ಮನಮೋಹನ ಸಿಂಗ್ ಅವರನ್ನೂ ಭೇಟಿ ಮಾಡಿ ಯಡಿಯೂರಪ್ಪನವರು ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ವಿವರಣೆ ನೀಡಿದ್ದಾರೆ. ನಂತರ ಬಿಜೆಪಿ ರಾಷ್ಟ್ರೀಯ ನಾಯಕ ಎಲ್ ಕೆ ಅಡ್ವಾಣಿ ಅವರನ್ನು ಯಡಿಯೂರಪ್ಪ ಭೇಟಿ ಮಾಡಿದರು. ಯಡಿಯೂರಪ್ಪ ಅವರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ, ಸುರೇಶ್ ಕುಮಾರ್, ಧನಂಜಯ ಕುಮಾರ್ ಮೊದಲಾದವರಿದ್ದರು.
ಶುಕ್ರವಾರ ರಾಜ್ಯಪಾಲರನ್ನು ಭೇಟಿ ಮಾಡಿದ್ದ ಯಡಿಯೂರಪ್ಪ, ಸಿಬಿಐ ತನಿಖೆಯ ಅಗತ್ಯವಿಲ್ಲವೆಂದು ಹೇಳಿದ್ದಾರೆ. ಈಗ ಸಿಬಿಐಗೆ ನೀಡಿದರೆ ತನಿಖೆ ಮತ್ತಷ್ಟು ವಿಳಂಬವಾಗಲಿದೆ ಎಂಬ ಕಾರಣ ನೀಡಿದ್ದಾರೆ. ಇದೇ ಸಮಯದಲ್ಲಿ ಕರ್ನಾಟಕದ ಕಾಂಗ್ರೆಸ್ ವಿಧಾನಸಭಾ ಸದಸ್ಯರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರನ್ನೂ ಭೇಟಿ ಮಾಡಿದ್ದಾರೆ.












Click it and Unblock the Notifications