ಎಂಪಿ ಪ್ರಕಾಶ್ ಪರ ನಿಂತ ಹೂವಿನ ಹಡಗಲಿ ಜನ
ಹೂವಿನಹಡಗಲಿಯ ಮೈಲಾರಲಿಂಗೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಪ್ರತಿಭಟನೆಯಲ್ಲಿ ಎಂ.ಪಿ. ಪ್ರಕಾಶ್ ಅವರ ಸಾವಿರಾರು ಬೆಂಬಲಿಗರು ಸ್ವಯಂಪ್ರೇರಿತರಾಗಿ ಪಾಲ್ಗೊಂಡು ಜಿ. ಜನಾರ್ದನರೆಡ್ಡಿ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು.
ಪ್ರತಿಭಟನೆ ಮೊದಲಘಟ್ಟ ಕ್ರಾಸ್ ಬಳಿ ಬರುತ್ತಿದ್ದಂತೆಯೇ ಪೊಲೀಸರು 200ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡು ಪೊಲೀಸ್ ಠಾಣೆಯಲ್ಲೇ ಒಂದು ತಾಸು ಕೂಡಿಸಿಕೊಂಡು ನಂತರ ಬಿಡುಗಡೆ ಮಾಡಿದ್ದಾರೆ.
ಹೂವಿನಹಡಗಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರುವಿನ ಕೊಟ್ರಯ್ಯ ಅವರು ಮಂಗಳವಾರ ಸಂಜೆ 'ಹೂವಿನಹಡಗಲಿ ಬಂದ್'ಗೆ ಕರೆ ನೀಡಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ನಾಗರಾಜ್ ಅವರು 'ಈ ಬಂದ್ ಕಾನೂನು ಬಾಹಿರ. ಪೊಲೀಸರಿಗೆ ಮಾಹಿತಿ ನೀಡಿಲ್ಲ, ಪರವಾನಿಗೆ ಪಡೆದಿಲ್ಲ' ಎಂದು ನೋಟೀಸ್ ಜಾರಿ ಮಾಡಿದ್ದರು.
ಈ ಹಿನ್ನಲೆಯಲ್ಲಿ ಹೂವಿನಹಡಗಲಿಯಲ್ಲಿ ಬುಧವಾರ ಬೆಳಗ್ಗೆಯಿಂದಲೇ ಬಿಗುವಿನ ವಾತಾವರಣ ನಿರ್ಮಾಣ ಆಗಿತ್ತು. ಈ ಬಂದ್ ಬಿಜೆಪಿ - ಕಾಂಗ್ರೆಸ್ ಮಧ್ಯೆ ಜಿದ್ದಾಜಿದ್ದಿ ಆಗಿ ಪರಿವರ್ತನೆ ಆಗುವ ಸಾಧ್ಯತೆಗಳು ಇದ್ದ ಹಿನ್ನಲೆಯಲ್ಲಿ ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ್ ಅನ್ನು ಜಿಲ್ಲಾ ಪೊಲೀಸ್ ಏರ್ಪಡಿಸಿತ್ತು. ಬಂದ್ ಶಾಂತಿಯುತವಾಗಿ, ಯಶಸ್ವಿಯಾಗಿ ನಡೆಯಿತು.
ಪೊಲೀಸರು ವಶಕ್ಕೆ ತೆಗೆದುಕೊಂಡವರಲ್ಲಿ ಇಟಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಐಗೋಳು ಚಿದಾನಂದ ಮತ್ತು ಹೂವಿನಹಡಗಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರುವಿನಕೊಟ್ರಯ್ಯ ಪ್ರಮುಖರು. ಬಂದ್ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳ ಹಾಜರಾತಿ ಕಡಿಮೆ ಆಗಿತ್ತು. ಸಾರಿಗೆ ಸಂಚಾರ ಸ್ಥಗಿತಗೊಂಡಿತ್ತು. ಅಂಗಡಿಮುಗ್ಗಟ್ಟುಗಳು ಬಂದ್ ಆಗಿದ್ದವು.