ಗೋಹತ್ಯೆ ನಿಷೇಧ ಕಾಯ್ದೆ ಏಕೆ ಬೇಡ?
ಆರಂಭದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವೆಂಕಯ್ಯ ನಾಯ್ಡು, ಕೇಂದ್ರದಲ್ಲಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. ಗೋಹತ್ಯೆ ನಿಷೇಧಕ್ಕೆ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಅನುಮೋದನೆ ಪಡೆದು ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಪ್ರಜಾಪ್ರಭುತ್ವದಲ್ಲಿ ಗೌರವವಿಲ್ಲದ ರಾಜ್ಯಪಾಲರು ವಿಧೇಯಕವನ್ನು ರಾಷ್ಟ್ರಪತಿ ಅವರಿಗೆ ರವಾನಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರಕಾರ ಸಿಬಿಐಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ರಾಜಭವನಗಳನ್ನು ಕೂಡಾ ಕಾಂಗ್ರೆಸ್ ಭವನಗಳನ್ನಾಗಿ ಪರಿವರ್ತಿಸುವ ಹುನ್ನಾರ ನಡೆಸಿದೆ ಅವರು ದೂರಿದರು. ಜನಪ್ರತಿನಿಧಿಗಳು ಆಯ್ಕೆಯಾಗುತ್ತಾರೆ. ರಾಜ್ಯಪಾಲರು ನೇಮಕವಾಗುತ್ತಾರೆ. ನೇಮಕವಾದವರು ಸಂವಿಧಾನಕ್ಕೆ ಬದ್ಧವಾಗಿರಬೇಕು. ಆದರೆ, ಕರ್ನಾಟಕದ ರಾಜ್ಯಪಾಲರು ಮಸೂದೆಗೆ ಸಹಿ ಹಾಕದಿರುವುದು ಖಂಡನೀಯ ಎಂದು ನಾಯ್ಡು ಕಿಡಿಕಾರಿದರು.
ಸಂವಿಧಾನದ ಆಶಯ ಮತ್ತು ಮಹಾತ್ಮಾಗಾಂಧಿ ಅವರ ಆದರ್ಶದಂತೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರನ್ನು ಓಲೈಸುಕೊಳ್ಳುವ ಸಲುವಾಗಿ ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ತರುತ್ತಿದೆ. ಹಲವು ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಕೂಡಾ ಗೋರಕ್ಷಣೆಗೆ ಮುಂದಾಗಿದೆ. ಇದಕ್ಕೆ ಸಹಕರಿಸದೆ ಕೇಂದ್ರ ಸರಕಾರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ವೆಂಕಯ್ಯ ನಾಯ್ಡು ಆಕ್ರೋಶ ವ್ಯಕ್ತಪಡಿಸಿದರು.
ನಂತರ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನಂತಕುಮಾರ, ಬಿಜೆಪಿ ರಾಜ್ಯಾಧ್ಯ ಕೆ ಎಸ್ ಈಶ್ವರಪ್ಪ, ಶಾಸಕ ಶಂಕರಲಿಂಗೇಗೌಡ ಸೇರಿದಂತೆ ಅನೇಕ ಮುಖಂಡರು ಮಾತನಾಡಿ, ಕಾಂಗ್ರೆಸ್ ಮುಖಂಡರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಗೋಹತ್ಯೆ ನಿಷೇಧ ಕಾಯ್ದೆಯನ್ನು ತಂದೇತಿರುತ್ತೇವೆ ಎಂದು ಹೇಳಿದರು.