ಸಾಮರಸ್ಯಕ್ಕೆ ಪೇಜಾವರ ಶ್ರೀಗಳಿಂದ ಪಾದಯಾತ್ರೆ
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಚಾತುರ್ಮಾಸ ವ್ರತ ಮುಗಿದ ಬಳಿಕ ಗ್ರಾಮಾಂತರ ಪ್ರದೇಶಗಳಲ್ಲಿ ಆಧ್ಯಾತ್ಮಿಕ ಯಾತ್ರೆ ಕೈಗೊಳ್ಳಲಿದ್ದು, ಈ ಸಂದರ್ಭದಲ್ಲಿ ದಲಿತರ ದೇವಾಲಯ ಪ್ರವೇಶ ಸೇರಿದಂತೆ ಅಸ್ಪೃಶತೆ ಆಚರಣೆ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ದಲಿತರ ದೇವಾಲಯ ಪ್ರವೇಶ ಮತ್ತು ಸಹಪಂಕ್ತಿ ಭೋಜನಕ್ಕೆ ಉತ್ತೇಜನ ನೀಡುವುದು ಪಾದಯಾತ್ರೆ ಮುಖ್ಯ ಉದ್ದೇಶವಾಗಿದೆ. ದಲಿತರ ಬಡಾವಣೆಗಳಲ್ಲಿ ಇತ್ತೀಚೆಗೆ ತಾವು ನಡೆಸಿದ ಪಾದಯಾತ್ರೆಗೆ ನಿವಾಸಿಗಳಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಆದ್ದರಿಂದ ಪಾದಯಾತ್ರೆ ಕಾರ್ಯಕ್ರಮವನ್ನು ಗ್ರಾಮಾಂತರ ಪ್ರದೇಶಗಳಿಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಶ್ರೀಗಳು ಹೇಳಿದರು.
ಗೋಹತ್ಯೆ ನಿಷೇಧಕ್ಕೆ ದಲಿತರಿಂದ ವಿರೋಧವಿಲ್ಲ. ಆದರೆ ಅವರ ಹೆಸರನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಗೋ ತಳಿ ರಕ್ಷಿಸುವುದಕ್ಕೆ ಅಂಬೇಡ್ಕರ್ ಅವರೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ್ದಾರೆ. ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ವಿರೋಧಿಸುವವರು, ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ವಿರೋಧಿಸಿದಂತೆ ಎಂದು ಶ್ರೀಗಳು ಅಭಿಪ್ರಾಯಪಟ್ಟರು.