ಶಾಮನೂರು ಶಿವಶಂಕರಪ್ಪಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ?
ಕಳೆದ 55 ವರ್ಷಗಳಿಂದ ತಾವು ಪಕ್ಷಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ ತಮ್ಮನ್ನು ಪಕ್ಷದ ಹೈಕಮಾಂಡ್ ನೇಮಕ ಮಾಡಲಿದ್ದಾರೆ ಎಂಬ ವಿಶ್ವಾಸವನ್ನು ಶಾಮನೂರು ಶಿವಶಂಕರಪ್ಪ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ರಾಜ್ಯದ ಅತಿದೊಡ್ಡ ಸಮುದಾಯವಾದವೀರಶೈವ ಸಮುದಾಯದಿಂದ ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಸ್ಪರ್ಧೆಯಲ್ಲಿದ್ದಾರೆ. ಈ ಬಾರಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ವೀರಶೈವ ಸಮುದಾಯಕ್ಕೆ ಸಲ್ಲಬೇಕು ಎಂದರು.
ಈ ಬಾರಿ ಕೆಪಿಸಿಸಿ ಅಧ್ಯಕ್ಷ ಗಾದಿಗೆ ವೀರಶೈವ ಸಮುದಾಯದ ಮುಖಂಡರನ್ನು ಆಯ್ಕೆ ಮಾಡುವಂತೆ ಹೈಕಮಾಂಡ್ ಗಮನಕ್ಕೆ ತರಲಾಗುತ್ತದೆ. ಈ ಸಂಬಂಧ ಸೆ.15ರಂದು ಬೆಂಗಳೂರಿನಲ್ಲಿ ಸಭೆ ಸೇರಿ ಚರ್ಚಿಸುವುದಾಗಿ ಅವರು ತಿಳಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ಅವರು ಗೌಪ್ಯ ಮತದಾನ ಅಥವಾ ಏಕವಾಕ್ಯ ನಿರ್ಣಯದ ಮೂಲಕ ಕೆಪಿಸಿಸಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಹೈಕಮಾಂಡ್ ಅವರ ಏಕವಾಕ್ಯ ನಿರ್ಣಯಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಆದರೆ ಯುವ ಜನಾಂಗ ಚುನಾವಣೆ ಮೂಲಕ ಅಧ್ಯಕ್ಷರ ಆಯ್ಕೆ ನಡೆಯಲಿ ಎಂದು ಬಯಸುತ್ತಿದೆ. ಪಕ್ಷದ ಹೈಕಮಾಂಡ್ ತೀರ್ಮಾನವೆ ಅಂತಿಮ. ಒಂದು ವೇಳೆ ಚುನಾವಣೆ ನಡೆದರೆ ಪಕ್ಷದಲ್ಲಿ ಭಿನ್ನಮತ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಕಡೂರು ಮತ್ತು ಗುಲ್ಬರ್ಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದರು.