ರೈಲ್ವೆ ಅಂಡರ್ಪಾಸ್ ನಿರ್ಮಾಣಕ್ಕೆ ಭೂಮಿಗೆ ಆಗ್ರಹ

ಶನಿವಾರ ಬೆಳಿಗ್ಗೆ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಅವರ ನಿವಾಸದಲ್ಲಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸಂಜಯ ನಗರ ಮತ್ತು ರಾಧಾಕೃಷ್ಣ ವಾರ್ಡ್ನಲ್ಲಿ ನಾಗರಿಕರಿಂದ ಮನವಿಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸುವ ಸಲುವಾಗಿ, ಸ್ಥಳೀಯ ಮಹಾನಗರ ಪಾಲಿಕೆಯ ಸದಸ್ಯರೊಂದಿಗೆ ಸಭೆಯನ್ನು ನಡೆಸಿದ ನಂತರ ಅವರು ಪತ್ರಕರ್ತರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.
ಸಂಜಯನಗರ ವಾರ್ಡನ್ನು ಮಾದರಿ ವಾರ್ಡ್ ಆಗಿ ಮಾಡುವ ದೃಷ್ಟಿಯಿಂದ ಕ್ರಿಯಾ ಯೋಜನೆಯನ್ನು ತಯಾರಿಸಲಾಗುತ್ತಿದ್ದು, ಕೂಡಲೇ ಬಿಡಿಎ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಚುರುಕಾಗಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳಾದ ರಸ್ತೆ, ಪಾದಚಾರಿ ಮಾರ್ಗ, ಖಾಲಿ ನಿವೇಶನಗಳ ಸ್ವಚ್ಛತೆ, ಕಸ ವಿಲೇವಾರಿ, ಒಳಚರಂಡಿ ನಿರ್ಮಾಣಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರಲ್ಲದೆ, ಈ ವಾರ್ಡಿನಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣವನ್ನು ನಿರ್ಮಿಸಲಾಗುವುದು ಎಂದರು.
ಪರವೂರಿನಿಂದ ಬೆಂಗಳೂರಿಗೆ ಉದ್ಯೋಗಕ್ಕಾಗಿ ವಲಸೆ ಬರುವ ಕಾರ್ಮಿಕರಿಗೆ ಮೂಲಭೂತ ಸೌಲಭ್ಯ ಇರುವ ವಸತಿ ಸಮುಚ್ಛಯಗಳನ್ನು ನಿರ್ಮಿಸಿಕೊಡುವ ಮೂಲಕ ಅವರಿಗೆ ಉತ್ತಮ ಜೀವನ ನಿರ್ವಹಣೆಗೆ ಅನುಕೂಲ ಮಾಡಿಕೊಡುವಂತೆ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ನೀಡಿದ ಸಲಹೆಗೆ, ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಸಮ್ಮತಿಸಿದರು. ನಗರದ 4 ದಿಕ್ಕುಗಳಲ್ಲಿ 600 ಜನರು ವಾಸಿಸಲು ಅನುಕೂಲವಾಗುವಂತಹ ಸಮುಚ್ಛಯಗಳನ್ನು ಸಾರ್ವಜನಿಕರಿಂದ ಸಂಗ್ರಹಿಸಲಾಗುವ ಸೆಸ್ ಮೊತ್ತದಲ್ಲಿ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚಿಸಿದರು.
ಸಾರ್ವಜನಿಕರ ಹಿತದೃಷ್ಟಿಯಿಂದ 2014ರೊಳಗೆ ರಾಜ್ಯದ ಎಲ್ಲಾ ರೋಡ್ ಕ್ರಾಸಿಂಗ್ಗಳನ್ನು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದ ಕೇಂದ್ರ ಸಚಿವರು, ಸುಗಮ ಸಂಚಾರ ನಿರ್ವಹಣೆಗಾಗಿ ಬೇಕಾಗುವ ಭೂಮಿಯ ಬಗ್ಗೆ ವರದಿ ಸಲ್ಲಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಹಾಗೂ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.












Click it and Unblock the Notifications