ಅಕ್ರಮ-ಸಕ್ರಮ ವಿಧೇಯಕಕ್ಕೆ ರಾಜ್ಯಪಾಲರಿಂದ ಬ್ರೇಕ್
ಬಡವರಿಗೆ ಅನುಕೂಲವಾಗಲೆಂದು ಅಕ್ರಮ ಸಕ್ರಮ ಯೋಜನೆ ರೂಪಿಸಲಾಗಿತ್ತು. ಬಡವರಿಗೆ ನೆರವಾಗುವ ಈ ಯೋಜನೆಗೆ ಒಪ್ಪಿಗೆ ಪಡೆಯಲು ನ್ಯಾಯಾಲಯದ ಮೊರೆ ಹೋಗಲಾಗುವುದೆಂದು ಸಾರಿಗೆ ಮತ್ತು ಗೃಹ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ರಾಜ್ಯಪಾಲರು ಅಂಕಿತ ಹಾಕದೆ ಮಸೂದೆಯನ್ನು ವಾಪಸ್ಸು ಕಳುಹಿಸಿದ್ದಾರೆ ಎಂಬ ವಿಚಾರ ಸರಕಾರದ ಗಮನಕ್ಕೆ ಬಂದಿದೆ. ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ.
ಅಕ್ರಮ ಸಕ್ರಮ ಮಸೂದೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ತಪ್ಪಾಗಿ ಅರ್ಥೈಸಿ ರಾಜ್ಯಪಾಲರು ವಾಪಸ್ಸು ಕಳುಹಿಸಿದ್ದಾರೆ. ಆದರೆ, ಈ ಬಗ್ಗೆ ನ್ಯಾಯಾಲಯ ತಡೆಯಾಜ್ಞೆ ನೀಡಿಲ್ಲ ಎಂದು ಅಶೋಕ್ ಸ್ಪಷ್ಟಪಡಿಸಿದರು. ಈ ಬಗ್ಗೆ ಕಾನೂನು ಸಚಿವರೊಂದಿಗೆ ಚರ್ಚಿಸಿ ನ್ಯಾಯಾಲಯದ ಮೆಟ್ಟಿಲು ಹತ್ತುವುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಾರಣ ಗೊತ್ತಿಲ್ಲ : ಅಕ್ರಮ ಸಕ್ರಮ ಯೋಜನೆಗೆ ಸಂಬಂಧಿಸಿದ ವಿಧೇಯಕಕ್ಕೆ ಒಪ್ಪಿಗೆ ನೀಡದೆ ರಾಜ್ಯಪಾಲರು ವಾಪಸ್ಸು ಕಳುಹಿಸಿರುವುದಕ್ಕೆ ಕಾರಣವೇನೆಂಬುದು ಗೊತ್ತಿಲ್ಲ. ಅಗತ್ಯವೆನಿಸಿದರೆ ರಾಜ್ಯಪಾಲರನ್ನು ಮತ್ತೊಮ್ಮೆ ಭೇಟಿಯಾಗಿ ವಿಧೇಯಕಕ್ಕೆ ಅಂಗೀಕಾರ ನೀಡುವಂತೆ ಮನವರಿಕೆ ಮಾಡಿಕೊಡಲಾಗುವುದು ಎಂದು ಕಾನೂನು ಸಚಿವ ಸುರೇಶಕುಮಾರ್ ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.
ರಾಜ್ಯಪಾಲರು ಕಳುಹಿಸಿರುವ ಕಡತ ತಮ್ಮ ಕೈ ತಲುಪಿಲ್ಲ. ವಿಧೇಯಕಕ್ಕೆ ಅಂಗೀಕಾರ ನೀಡದಿರುವುದಕ್ಕೆ ಕಾರಣವೇನೆಂಬುದು ಇನ್ನು ತಿಳಿದಿಲ್ಲ. ಅದನ್ನು ಪರಿಶೀಲಿಸಿದ ನಂತರ ರಾಜ್ಯಪಾಲರಿಗೆ ಏನೇ ಅನುಮಾನಗಳಿದ್ದರೂ ಅವುಗಳನ್ನು ಬಗೆಹರಿಸುವ ಪ್ರಯತ್ನ ಮಾಡಲಾಗುವುದು ಎಂದು ಸುರೇಶಕುಮಾರ್ ಹೇಳಿದರು.
ಸೆಲ್ ಫೋನಿನಲ್ಲಿ ದಟ್ಸ್ ಕನ್ನಡ ಓದುವ ಸಂಭ್ರಮ