ರಾಜ್ಯದ 31 ಜಿಲ್ಲೆಗಳಲ್ಲಿ ಶಾಂತಿ ಸಭೆಗೆ ಏರ್ಪಾಟು

ತೀರ್ಪು ಹೊರಬೀಳಲಿರುವ ಮುಂದಾಲೋಚನೆಯಲ್ಲಿ ಬುಧವಾರ ಬೆಳಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಗೃಹ ಸಚಿವ ಆರ್ ಅಶೋಕ್, ಅಯೋಧ್ಯೆ ತೀರ್ಪು ನಾಳೆ ಹೊರಬೀಳಲಿದೆ. ಹೀಗಾಗಿ ರಾಜ್ಯಾದ್ಯಂತ ಭಾರಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವರಿಷ್ಠಧಿಕಾರಿಗಳಿಗೆ ಈ ಬಗ್ಗೆ ಕಟ್ಟುನಿಟ್ಟಿನ ಆದೇಶ ರವಾನಿಸಲಾಗಿದ್ದು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ತೀರ್ಪು ನಾಳೆ ಇರುವುದರಿಂದ ಇಂದು ಸಂಜೆ ಆಯಾ ಜಿಲ್ಲೆಯ ವಿವಿಧ ಧಾರ್ಮಿಕ ಮುಖಂಡರ ಸಭೆ ಕರೆದು ಚಹಾಕೂಟ ಏರ್ಪಡಿಸಿ, ಮಾಧ್ಯಮಗಳ ಮೂಲಕ ಶಾಂತಿ ಸೌಹಾರ್ದತೆಯನ್ನು ಕಾಪಾಡಲು ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳಬೇಕೆಂದು ಎಸ್ಪಿ, ಡಿಸಿಗಳಿಗೆ ತಿಳಿಸಲಾಗಿದೆ. ಪೊಲೀಸ್ ಸಿಬ್ಬಂದಿಗೆ ರಜೆ ನೀಡದಂತೆ ಕೂಡಾ ತಿಳಿಸಲಾಗಿದೆ ಎಂದು ಅಶೋಕ್ ತಿಳಿಸಿದರು.
ಸೂಕ್ಷ್ಮ ಪ್ರದೇಶಗಳು ಎನಿಸಿರುವ ಹುಬ್ಬಳ್ಳಿ, ಮಂಗಳೂರು, ಧಾರವಾಡ, ಬೆಂಗಳೂರು, ಬೆಳಗಾವಿ, ಗುಲ್ಬರ್ಗ ಬಳ್ಳಾರಿಗಳಲ್ಲಿ ಹೆಚ್ಚಿನ ಬಂದೋಬಸ್ತ್ ನಿಯೋಜಿಸುವುದರ ಜೊತೆಗೆ ಈ ಪ್ರದೇಶದಲ್ಲಿ ಸಿಸಿಟಿವಿಗಳನ್ನು ಅಳವಡಿಸಲು ಸೂಚಿಸಲಾಗಿದೆ. ಇದಕ್ಕೆ ಹೊರತಾಗಿ ಕೋಮುಗಲಭೆಗಳು ನಡೆದಲ್ಲಿ ಆಯಾ ಜಿಲ್ಲೆಗಳ ಜಿಲ್ಲಾ ವರಿಷ್ಠಾಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಆಯಾ ಎಸ್ಪಿ, ಡಿಸಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಗುವುದು ಎಂದು ಅಶೋಕ್ ತಿಳಿಸಿದರು.
ತೀರ್ಪಿನ ಹಿನ್ನೆಲೆಯಲ್ಲಿ ಮದುವೆ ಮತ್ತು ಕೌಟುಂಬಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ಪ್ರತಿಭಟನೆ, ವಿಜಯೋತ್ಸವ ಮತ್ತಿತರ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಿಷೇಧಿಸಲಾಗಿದೆ. ಅಗತ್ಯ ವಸ್ತುಗಳಾದ ಹಾಲು, ತರಕಾರಿ, ಔಷಧಿಗಳಿಗೆ ಯಾವುದೇ ತೊಂದರೆ ಇಲ್ಲ. ಪೆಟ್ರೋಲ್ ಬಂಕ್ ಗಳನ್ನು ಹೊರತುಪಡಿಸಿ ಚಿಲ್ಲರೆ ಪೆಟ್ರೋಲ್ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಇದಕ್ಕೆ ಮೀರಿ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ, ಅವರು ಎಷ್ಟೇ ದೊಡ್ಡವರಾದರೂ ಸರಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಅಶೋಕ್ ಸ್ಪಷ್ಟಪಡಿಸಿದರು. ಡಿಜಿ-ಐಜಿಪಿ ಅಜಯಕುಮಾರ್ ಸಿಂಗ್ ಉಪಸ್ಥಿತರಿದ್ದರು.
ಸೆಲ್ ಫೋನಿನಲ್ಲಿ ದಟ್ಸ್ ಕನ್ನಡ ಓದುವ ಸಂಭ್ರಮ












Click it and Unblock the Notifications