ಇಂಗ್ಲಿಷ್ ನಾಮಫಲಕಕ್ಕೆ ಕರವೇ ಪ್ರತಿಭಟನೆ
ಕನ್ನಡ ರಾಜ್ಯೋತ್ಸವ ಆಂಗವಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ನೇತೃತ್ವದಲ್ಲಿ ಸುಮಾರು 35 ಕಾರ್ಯಕರ್ತರು ರೈಲ್ವೆ ನಿಲ್ದಾಣ ಮುಂಭಾಗದಲ್ಲಿರುವ ಇಂಗ್ಲಿಷ್ ಜಾಹೀರಾತು ಫಲಕಗಳಿಗೆ ಮಸಿ ಬಳಿದರು. ಕರ್ನಾಟಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಇಂಗ್ಲಿಷ್ನಲ್ಲಿರುವ ನಾಮ ಫಲಕಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಘೋಷಣೆ ಕೂಗಿದರು.
ಸ್ಥಳಕ್ಕೆ ಧಾವಿಸಿದ ಹೈಗ್ರೌಂಡ್ಸ್ ಠಾಣೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಈ ಮಧ್ಯೆ ಕರವೇ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ವಾಗ್ವಾದ ಉಂಟಾಯಿತು. ನಂತರ ನಾರಾಯಣಗೌಡ ಸೇರಿದಂತೆ ಕಾರ್ಯಕರ್ತರನ್ನು ಬಂಧಿಸಿ ಸಂಜೆ 4 ಗಂಟೆಗೆ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಾರಾಯಣಗೌಡ, 2008ರಲ್ಲಿ ಕನ್ನಡ ನಾಮಫಲಕ ಹಾಕದ ಸಂಸ್ಥೆಗಳಿಗೆ 10 ಸಾವಿರ ರೂ. ದಂಡ ಮತ್ತು ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಸರಕಾರ ಆದೇಶ ಹೊರಡಿಸಿತ್ತು. ಆದರೆ, ನಗರದಲ್ಲಿ ಇಷ್ಟೊಂದು ಇಂಗ್ಲಿಷ್ ಜಾಹೀರಾತು ಫಲಕಗಳಿದ್ದರೂ ಯಾರೊಬ್ಬರಿಗೂ ದಂಡ ಅಥವಾ ಜೈಲು ಶಿಕ್ಷೆ ವಿಧಿಸಿಲ್ಲ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯದ್ದೇ ಆಡಳಿತ ಇದ್ದರೂ ಸರಕಾರ ಆಂಗ್ಲ ನಾಮಫಲಕ ಹಾಕುವವರ ವಿರುದ್ಧ ಕ್ರಮಕ್ಕೆ ಮುಂದಾಗದಿರುವುದು ಖಂಡನೀಯ ಎಂದರು.