ಆರ್ಎಸ್ಎಸ್ ಭಯೋತ್ಪಾದಕ ಸಂಘಟನೆ : ಕಾಂಗ್ರೆಸ್
ನವದೆಹಲಿಯಲ್ಲಿ ಮಂಗಳವಾರ ನಡೆದ ಅಖಿಲ ಭಾರತ ಕಾಂಗ್ರೆಸ್ ಕಮೀಟಿಯ ಸಮಾವೇಶದಲ್ಲಿ ಆರ್ಎಸ್ಎಸ್ ಮೇಲೆ ಈ ಆರೋಪ ಮಾಡಲಾಗಿದ್ದು, ಭಯೋತ್ಪಾದನೆ ಮತ್ತು ಜಾತೀಯತೆ ದೇಶಕ್ಕೆ ಕಂಟಕವಾಗಿ ಪರಿಣಿಮಿಸಿವೆ. ಮುಖ್ಯವಾಗಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಮತ್ತು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರು ಆರ್ಎಸ್ಎಸ್, ಬಿಜೆಪಿ ವಿರುದ್ಧ ಪರೋಕ್ಷ ದಾಳಿ ನಡೆಸಿದರು.
ಅಜ್ಮೇರ್ ಸ್ಫೋಟದಲ್ಲಿ ಆರ್ಎಸ್ಎಸ್ ಮುಖ್ಯಸ್ಥನ ಕೈವಾಡವಿರುವುದು ಸ್ಪಷ್ಟವಾಗಿದೆ. ರಾಜಸ್ತಾನ ಪೊಲೀಸರು ಸಲ್ಲಿಸಿರುವ ಚಾರ್ಜ್ ಸೀಟ್ ನಲ್ಲಿ ಆರ್ ಎಸ್ಎಸ್ ಮುಖ್ಯಸ್ಥ ಇಂದ್ರೇಶ್ ಕುಮಾರ್ ಅವರು ಭಯೋತ್ಪಾದನೆ ಕುಮ್ಮಕ್ಕು ನೀಡಿರುವುದು ಇದರಿಂದ ಸಾಬೀತಾಗಿದೆ. ಇತ್ತೀಚೆಗೆ ನಡೆದ ತನಿಖೆಯಿಂದ ಆರ್ಎಸ್ಎಸ್ ಬಣ್ಣ ಬಯಲಾಗಿದೆ. ಇಂತಹ ದೇಶದ್ರೋಹಿ ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಲಿದೆ ಎಂದು ಪ್ರಣಬ್ ಮುಖರ್ಜಿ ಹೇಳಿದರು.
ಸರಕಾರದ ಸಾಧನೆ ಸಂತೃಪ್ತಿ ತಂದಿದೆ. ಯುಪಿಎ ಸರಕಾರ ಬಡವರ ಸರಕಾರವಾಗಿದ್ದು, ಬಡವರಿಗಾಗಿ ಸರಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಕೃತ್ಯ ತಡೆಗೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಾತಿ ವಿಂಗಡಣೆಯಲ್ಲಿ ಪಾಲ್ಗೊಂಡಿರುವ ಪ್ರಮುಖ ಸಂಘಟನೆಯೊಂದು ಭಯೋತ್ಪಾದನಾ ಕೃತ್ಯದಲ್ಲಿ ಭಾಗಿಯಾಗಿರುವ ಅಂಶ ಗೊತ್ತಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವ ಅಗತ್ಯವಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹೇಳಿದ್ದಾರೆ. ಮಾಲೇಗಾಂವ್ ಸ್ಫೋಟದಲ್ಲಿ ಸಾಧ್ವಿ ಪ್ರಗ್ಯಾಸಿಂಗ್ ಸೇರಿದಂತೆ ಅನೇಕ ಹಿಂದು ಸಂಘಟನೆಯ ಮುಖಂಡರ ಭಾಗಿಯಾಗಿದ್ದಾರೆ ಎಂಬ ಆರೋಪವಿದೆ.