ಮಂಡ್ಯದಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರ ಬಂಧನ
ಅತ್ತ ಸಿಎಂ ಯಡಿಯೂರಪ್ಪ ಅವರು ಸೀರೆ ಹಂಚುವುದಷ್ಟೇ ನಮ್ಮ ಕಾಯಕವಲ್ಲ, ಬೃಹತ್ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಮಕ್ಕಳಿಗೆ ವಿದ್ಯಾಭ್ಯಾಸ ಒದಗಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಸೀರೆಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಇದು ಪಂಚಾಯ್ತಿ ಎಲೆಕ್ಷನ್ ಗಿಮಿಕ್ ಅಲ್ಲ. ಜನಪರ ಕಾರ್ಯಕ್ರಮ, ಎಲ್ಲಾ ಜಿಲ್ಲೆಗಳಲ್ಲಿ ನಡೆಯಲಿದೆ. ಇದನ್ನು ಯಾರು ತಡೆಯಲಾರರು ಎಂದು ವಿರೋಧಿಗಳಿಗೆ ಪ್ರತಿಏಟು ನೀಡಿದ್ದಾರೆ.
ಜಿಲ್ಲೆಯ ಎಲ್ಲೆಡೆ ಪ್ರತಿಭಟನೆ, ಲಾಠಿ ಚಾರ್ಚ್: ಬೆಳ್ಳಂಬೆಳ್ಳೆಗೆಯೆ ರಸ್ತೆಗಿಳಿದ ಜೆಡಿಎಸ್ ಕಾರ್ಯಕರ್ತರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಸೇರಿದಂತೆ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದರು. ಕೆಲವೆಡೆ ಬಸ್ ಗಳನ್ನು ಅಡ್ಡಗಡ್ಡಿ, ಹಿಂದಕ್ಕೆ ತೆರಳುವಂತೆ ಎಚ್ಚರಿಸಿದರು. ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಧರಣಿ ನಡೆಸುತ್ತಿದ್ದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಈ ಘಟನೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ಮೈಸೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.
CrPC ಸೆಕ್ಷನ್ 144 ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿದ್ದರೂ, ಲೆಕ್ಕಿಸದೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಂಡ್ಯ ಶಾಸಕ ಎಂ ಶ್ರೀನಿವಾಸ್, ಮೇಲುಕೋಟೆ ಶಾಸಕ ಸಿ.ಎಸ್ ಪುಟ್ಟರಾಜು ಹಾಗೂ ಶ್ರೀರಂಗಪಟ್ಟಣದ ಎಂಎಲ್ ಎ ರಮೇಶ್ ಬಂಡಿ ಸಿದ್ದೇಗೌಡ, ಮಾಜಿ ಶಾಸಕ ಅನ್ನದಾನಿ, ಚಿಕ್ಕಣ್ಣ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು, ಪ್ರತಿಭಟನೆಯನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾದರು. ಬಂಧಿತ ಶಾಸಕರನ್ನು ಸರ್ಕಾರಿ ಬಾಲಕರ ಶಾಲೆ ಕೊಠಡಿಯಲ್ಲಿ ಇರಿಸಲಾಗಿದೆ.
ಕಳಪೆ ಗುಣಮಟ್ಟದ ಸೀರೆಗಳನ್ನು ಖರೀದಿಸಲಾಗಿದ್ದು, ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸೀರೆ ಹಂಚಿಕೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ. ನನ್ನ ಕ್ಷೇತ್ರದಲ್ಲಿ ಸೀರೆ ಹಂಚಿಕೆಗೆ ಅವಕಾಶ ನೀಡುವುದಿಲ್ಲ ಎಂದು ಸಂಸದ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಕರೆ ನೀಡಿದ್ದರಿಂದ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದರು. ನಾಳೆ ಜೆಡಿಎಸ್ ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಎಂಎಲ್ ಎ ಪುಟ್ಟರಾಜು ಹೇಳಿದ್ದಾರೆ.
ನಾಳೆ ಸಚಿವ ಸಂಪುಟ ಸಭೆ: ಮಂಡ್ಯದಿಂದ ಬೆಳಗಾವಿಗೆ ತೆರಳಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಾಳೆ ಸಂಜೆ 5 ಕ್ಕೆ ರಾಜ್ಯ ಸಚಿವ ಸಂಪುಟ ಸಭೆ ನಡೆಸಲಾಗುವುದು. 'ಜಲ್' ಪ್ರಳಯ ದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸುವ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.
ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7