ಶುರುವಾದ ಮತದಾನ, ನೀರಸ ಆರಂಭ
ಪ್ರಥಮ ಬಾರಿಗೆ ವಿದ್ಯುನ್ಮಾನ ಮತ ಯಂತ್ರ ಬಳಸಿ ನಡೆಯುತ್ತಿರುವ ಚುನಾವಣೆ ಇದಾಗಿದ್ದು, ಜಿಪಂನ 1549 ಮಂದಿ ಹಾಗೂ ತಾಪಂನ 4762 ಮಂದಿ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆವರೆಗೆ ನಡೆಯಲಿದೆ. 12,880 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಈ ಪೈಕಿ 2651 ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು 2,216 ಮತಗಟ್ಟೆಗಳನ್ನು ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ. ಒಟ್ಟು 86,900 ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
12 ಜಿಲ್ಲೆಗಳಲ್ಲಿ ಮತಗಾನ ಆರಂಭವಾಗಿದ್ದು, ನಿಧಾನಗತಿಯಲ್ಲಿ ಮತದಾರರು ಮತಗಟ್ಟೆ ಕಡೆಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕು ವ್ಯಾಪ್ತಿಯಲ್ಲಿ ಅಕ್ರಮ ಮತದಾನ ಮಾಡಲು ಬಂದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ತಾಲ್ಲೂಕಿನ ತಾರಾ ನಗರ ಜಿಪಂ ವ್ಯಾಪ್ತಿಯಲ್ಲಿ ಭುಜಂಗನಗರ ಮತಕ್ಷೇತ್ರದಲ್ಲಿ ಅಭ್ಯರ್ಥಿಗಳ ಚಿಹ್ನೆ ಅದಲು ಬದಲಾಗಿದ್ದರಿಂದ ಚುನಾವಣೆಯನ್ನು ಡಿ 31ಕ್ಕೆ ಮುಂದೂಡಲಾಗಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಬಿ ಶಿವಪ್ಪ ತಿಳಿಸಿದ್ದಾರೆ.
ಗೆಲುವು ನಮ್ಮದೇ : ಜಿಪಂ ತಾಪಂ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನು ಮೂರು ತಿಂಗಳಲ್ಲಿ ಸರಕಾರ ಪತನಗೊಳ್ಳಲಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಅವರು, ನಿಜ ಮೂರು ತಿಂಗಳಲ್ಲಿ ಕೇಂದ್ರ ಸರಕಾರ ಪತನಗೊಳ್ಳಲಿದೆ ಎಂದು ಲೇವಡಿ ಮಾಡಿದರು.(ಮತದಾನ)