ಪೇಜಾವರಶ್ರೀಗೆ ಕಾಗೋಡು ತಿಮ್ಮಪ್ಪ ಸವಾಲು
ನಗರದ ಕರ್ನಾಟಕ ಸಂಘದಲ್ಲಿ ಗಣರಾಜೋತ್ಸವ ಅಂಗವಾಗಿ ಎನ್ಎಸ್ಯುಐ ಸಂಘಟನೆ ಏರ್ಪಡಿಸಿದ್ದ ನಿರ್ಗತಿಕರಿಗೆ-ಭಿಕ್ಷುಕರಿಗೆ ಉಚಿತ ಕಂಬಳಿ ಹಾಗೂ ಹೊದಿಕೆ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.
ಶ್ರೀಗಳು ದಲಿತ ಕೇರಿಗಳಲ್ಲಿ ಕೇವಲ ಪಾದಯಾತ್ರೆ ಮಾಡುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಈ ನಿಟ್ಟಿನಲ್ಲಿ ಅವರು ಜಾತಿ ವಿನಾಶ ಮಾಡುವಂತಹ ಸಕಾರಾತ್ಮಕ ಕಾರ್ಯಕ್ರಮಗಳನ್ನು ರೂಪಿಸಬೇಕು. ಈ ನಿಟ್ಟಿನಲ್ಲಿ ಅವರು ದಲಿತರ ಕೇರಿಗಳಲ್ಲಿಯೇ ಊಟ ಮಾಡಿ, ಮಲಗುವ ನಿರ್ಧಾರ ಕೈಗೊಳ್ಳಬೇಕು. ಈ ರೀತಿಯ ಕಾರ್ಯಕ್ರಮಗಳಿಗೆ ತಮ್ಮ ಬೆಂಬಲವೂ ಇದೆ ಎಂದು ಅವರು ಸ್ಪಷ್ಟಪಡಿಸಿದರು.
ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಸಮಾಜದ ದುರ್ಬಲ ವರ್ಗಗಳಿಗೆ ಯಾವುದೇ ರೀತಿಯ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿಲ್ಲ. ಹಾಗೆಯೇ ಈ ವರ್ಗಗಳ ಶ್ರೇಯೋಭಿವೃದ್ದಿಗೆ ಪರಿಣಾಮಕಾರಿ ಕಾರ್ಯಕ್ರಮಗಳ ಅನುಷ್ಠಾನ ಮಾಡುವಲ್ಲಿಯೂ ಸರ್ಕಾರ ವಿಫಲವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ದೇಶದ ಸಂವಿಧಾನ ಅತ್ಯಂತ ಬಲಿಷ್ಠವಾಗಿರುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ಉಳಿದಿದೆ. ಅದರ ಫಲವಾಗಿಯೇ ಸಮಾಜದ ದುರ್ಬಲ ವರ್ಗಗಳಿಗೆ, ಶೋಷಿತರಿಗೆ, ಮಹಿಳೆಯರಿಗೆ ಹಲವು ಸೌಲಭ್ಯಗಳು ಬಂದಿವೆ ಎಂದು ಅವರು ಅಭಿಪ್ರಾಯಪಟ್ಟರು.
ಸಮಾಜದ ಅಶಕ್ತರು, ಭಿಕ್ಷುಕರು, ನಿರ್ಗತಿಕರಿಗೆ ಕಂಬಳಿ-ಹೊದಿಕೆ ನೀಡುವ ಎನ್ಎಸ್ಯುಐ ಸಂಘಟನೆಯ ಕಾರ್ಯ ಶ್ಲಾಘನೀಯವಾದುದು. ಮುಂದಿನ ದಿನಗಳಲ್ಲಿ ಈ ರೀತಿಯ ಮತ್ತಷ್ಟು ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳಬೇಕು. ಹಾಗೆಯೇ ಈ ವರ್ಗಗಳಿಗೆ ಸರ್ಕಾರದಿಂದ ದೊರಕಬೇಕಾದ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕೆಂದು ಅವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಎನ್ಎಸ್ಯುಐ ಸಂಸ್ಥೆ ರಾಜ್ಯಾಧ್ಯಕ್ಷ ಬಂಗಾರೇಶ್, ಶಿವಮೊಗ್ಗ-ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಮಧುಸೂಧನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಪ್ರಮುಖರಾದ ದೇವೇಂದ್ರಪ್ಪ, ಶಮೀಮ್ ಭಾನು, ರವಿಕುಮಾರ್, ರಮೇಶ್, ರಾಮೇಗೌಡ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು. [ನಾಗರಿಕ ಪತ್ರಕರ್ತ]