ಮಡಿಕೇರಿಯಲ್ಲಿ ಬಂದ್: ನಿಷೇಧಾಜ್ಞೆ ಜಾರಿ
ಶ್ರೀಹನುಮದ್ ಶಕ್ತಿ ಜಾಗರಣ ಆಭಿಯಾನದ ವತಿಯಿಂದ ನಿನ್ನೆ ಹಿಂದೂ ಸಮಾಜೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭ ಭವ್ಯ ಮೆರವಣಿಗೆ ನಗರದಲ್ಲಿ ನಡೆಯಿತು. ಮೆರವಣಿಗೆ ಹಾದು ಹೋಗುವ ಮಾರ್ಗದಲ್ಲಿರುವ ಅಂಗಡಿಯನ್ನು ಮುಚ್ಚಲಾಗಿತ್ತು. ಆದರೆ ಒಂದು ಕೋಮಿನವರು ಅಂಗಡಿಯನ್ನು ಮುಚ್ಚದೆಯಿದ್ದಾಗ ಅಂಗಡಿಗಳ ಮೇಲೆ ಕಲ್ಲು ತೂರಾಟವೂ ನಡೆದಿತ್ತು. ಇದರಿಂದ ನಗರದಲ್ಲಿ ಸ್ವಲ್ಪ ಬಿಗುವಿನ ವಾತಾವರಣ ಉಂಟಾಗಿತ್ತಾದರೂ ಪೊಲೀಸರು ಮಧ್ಯ ಪ್ರವೇಶಿಸಿದ್ದರಿಂದ ಪರಿಸ್ಥಿತಿ ತಹಬದಿಗೆ ಬಂದಿತ್ತು.
ಈ ಹಿನ್ನಲೆಯಲ್ಲಿ ಘಟನೆಯನ್ನು ಖಂಡಿಸಿ ಕೊಡಗು ಮುಸ್ಲಿಂ ಹಿತರಕ್ಷಣಾ ಸಮಿತಿ ಬಂದ್ಗೆ ಕರೆ ನೀಡಿದ ಹಿನ್ನಲೆಯಲ್ಲಿ ಇಂದು ಮುಸ್ಲಿಂ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದರಿಂದಾಗಿ ಸುತ್ತಮುತ್ತಲಿನ ಹಳ್ಳಿಗಳಿಂದ ಸಂತೆಗೆಂದು ಬಂದಿದ್ದವರು ಪರದಾಡುವಂತಾಯಿತು. ಮಾರುಕಟ್ಟೆಗೆ ವ್ಯಾಪಾರಿಗಳು ಬಾರದ ಹಿನ್ನಲೆಯಲ್ಲಿ ಬಿಕೋ ಎನ್ನುತ್ತಿತ್ತು.
ಜಿಲ್ಲೆಯಾದ್ಯಂತ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮಡಿಕೇರಿ ನಗರದ ಎಲ್ಲಡೆ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲದೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಇಂದಿನಿಂದ ಸೋಮವಾರ(ಫೆ.28)ದವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.