ಮಂಡ್ಯ ಜನತೆಯನ್ನು ಬಡಿದೆಬ್ಬಿಸಿದ ಪರಿಸರ ಪ್ರೇಮ

ಅರಣ್ಯ ಇಲಾಖೆ, ನಬಾರ್ಡ್, ಪರಿಸರ ರೂರಲ್ ಡೆವಲೆಪ್ಮೆಂಟ್ ಸೊಸೈಟಿ, ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದೇಶಾದ್ಯಂತ ಇಂದು ಪರಿಸರ ದಿನಾಚರಣೆ ಆಚರಿಸಲಾಗುತ್ತಿದೆ. ಪರಿಸರ ಸಂರಕ್ಷಣೆ ಒಂದೇ ದಿನಕ್ಕೆ ಸೀಮಿತವಾಗಬಾರದು. ಪರಿಸರ ಸಂರಕ್ಷಣೆ ಚಳವಳಿ ಮಾದರಿಯಲ್ಲಿ ಪ್ರತಿದಿನ ನಡೆಯಬೇಕು ಎಂದರು.
ವಿದ್ಯಾರ್ಥಿಗಳು, ಯುವಜನರು ಹಾಗೂ ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು. ಪ್ರತಿಯೊಬ್ಬರು ಮರಗಿಡಗಳನ್ನು ನೆಟ್ಟು ಪೋಷಿಸಬೇಕು. ಪ್ರತಿ ಗ್ರಾಮಗಳಲ್ಲಿ ವನ ಬೆಳೆಸಬೇಕು ಎಂದು ಮನವಿ ಮಾಡಿದರು.
ರಾಷ್ಟ್ರದಲ್ಲಿ ಶೇ.33ರಷ್ಟು ಅರಣ್ಯ ಪ್ರದೇಶವಿದೆ. ಜಿಲ್ಲೆಯಲ್ಲಿ ಶೇ.8ರಷ್ಟು ಮಾತ್ರ ಅರಣ್ಯ ಪ್ರದೇಶವಿದ್ದು, ಅರಣ್ಯ ಬೆಳೆಸಲು ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು ಎಂದರು. ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಚ್. ವಿನಯ್ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಜಾಗತಿಕ ತಾಪಮಾನ ಹೆಚ್ಚಾಗಿದ್ದು, ಜನತೆ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ತಾಪಮಾನವನ್ನು ತಡೆಗಟ್ಟಲು ಪರಿಸರ ಸಂರಕ್ಷಣೆಯೊಂದೇ ಮಾರ್ಗೋಪಾಯ ಎಂದು ಹೇಳಿದರು.
ಅರಣ್ಯವಿದ್ದರೆ ಮಳೆ ಬರುತ್ತದೆ. ಮಳೆಯ ನೀರನ್ನು ಅಂತರ್ಜಲವಾಗಿ ಮಾರ್ಪಡಿಸಲು ಅರಣ್ಯ ಅತ್ಯವಶ್ಯಕ. ಭೂಮಿಯ ಸವಕಳಿ, ವಾಯುಮಾಲಿನ್ಯ ತಡೆಗೂ ಮರಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದು ಸಲಹೆ ನೀಡಿದರು.
ಎಸ್ಬಿಎಂ ಸಹಾಯಕ ವ್ಯವಸ್ಥಾಪಕ ಮಲ್ಲಿಕಾರ್ಜುನಪ್ಪ ಮಾತನಾಡಿ, ನಗರ ಪ್ರದೇಶಗಳಲ್ಲಿ ಪರಿಸರ ಸಾಕಷ್ಟು ಹಾಳಾಗಿದೆ. ಕಾರ್ಖಾನೆ, ವಾಹನಗಳ ಮಲೀನದಿಂದ ಶುದ್ದ ಗಾಳಿಯೂ ದೊರೆಯದಂತಾಗಿದೆ. ಇದರಿಂದ ಹಲವು ರೋಗಗಳಿಗೆ ರಹದಾರಿ ಮಾಡಿಕೊಟ್ಟಂತಾಗಿದೆ ಎಂದರು.
ಬ್ಯಾಂಕ್ ವತಿಯಿಂದ ಪರಿಸರ ಸಂರಕ್ಷಣೆಗೆ ಸಹಕಾರ ನೀಡುವುದಾಗಿ ತಿಳಿಸಿದ ಅವರು, ಜಿಲ್ಲೆಯ ವಿವಿಧೆಡೆ ಪರಿಸರ ಸಂರಕ್ಷಣೆ ಜಾಗೃತಿ ಮೂಡಿಸಲು "ಒಂದು ಮರ ಕಡಿದರೆ ಮೂರು ಮರ ನೆಟ್ಟು ಬೆಳೆಸಿ" ಎಂದು ಫಲಕಗಳನ್ನು ಹಾಕಿಸುವುದಾಗಿ ತಿಳಿಸಿದರು. ಜಿಲ್ಲಾ ಲೋಕ ಶಿಕ್ಷಣಾಧಿಕಾರಿ ಕೆ. ಕಾಳೇಗೌಡ, ಪರಿಸರ ರೂರಲ್ ಡೆವಲಪ್ ಮೆಂಟ್ ಸೊಸೈಟಿ ಅಧ್ಯಕ್ಷ ಮಂಗಲ ಎಂ. ಯೋಗೇಶ್, ಕಲಾವಿದರಾದ ಬಸವಯ್ಯ, ಪುಟ್ಟಸ್ವಾಮಿ ಭಾಗವಹಿಸಿದ್ದರು.











Click it and Unblock the Notifications