ಇನ್ಫೋಸಿಸ್ ಮೂರ್ತಿ ಹೊರಟರು ಪಶ್ಚಿಮ ಬಂಗಾಳಕ್ಕೆ
ಮಾಹಿತಿ ತಂತ್ರಜ್ಞಾನ ಸಲಹಾ ಸಮಿತಿಯ ಮಾರ್ಗದರ್ಶಕರಾಗುವಂತೆ ಕೋರಿ ನಾರಾಯಣ ಮೂರ್ತಿ ಅವರಿಗೆ ಇತ್ತೀಚೆಗೆ ಪಶ್ಚಿಮ ಬಂಗಾಳ ಸರ್ಕಾರ ಮನವಿ ಮಾಡಿಕೊಂಡಿತ್ತು. ಈ ಮನವಿಗೆ ನಾರಾಯಣ ಮೂರ್ತಿ ಅವರು ಒಪ್ಪಿಗೆ ನೀಡಿದ್ದಾರೆ ಎಂದು ರಾಜ್ಯದ ಕೈಗಾರಿಕೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪಾರ್ಥ ಚಟರ್ಜಿ ತಿಳಿಸಿದ್ದಾರೆ.
ಒಂದು ವೇಳೆ ಮೂರ್ತಿ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಇದ್ದಲ್ಲಿ ಅವರನ್ನು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಸಂಪರ್ಕಿಸುವುದಾಗಿ ಸಚಿವರು ಹೇಳಿದರು. ಮೂರ್ತಿ ಅವರ ಮಾರ್ಗದರ್ಶನ ಹಾಗೂ ಸಲಹೆಯು ರಾಜ್ಯದ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಹೆಚ್ಚಿನ ಬಂಡವಾಳ ಹರಿದು ಬರುವಲ್ಲಿ ಹೆಚ್ಚು ಸಹಕಾರಿಯಾಗಲಿದೆ ಎಂದು ಚಟರ್ಜಿ ಆಶಿಸಿದರು.
ನಾರಾಯಣಮೂರ್ತಿ ಅವರ ಮಾರ್ಗದರ್ಶನದಲ್ಲಿ ದೇಶ ಮತ್ತು ವಿದೇಶಗಳಲ್ಲಿನ ಉತ್ತಮ ಕೈಗಾರಿಕಾ ನಿಯಮಾವಳಿಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಚಟರ್ಜಿ ಹೇಳಿದರು. ರಾಜ್ಯದಲ್ಲಿ ಮಾಹಿತಿ ತಂತ್ರಜ್ಞಾನ ಅಭಿವೃದ್ಧಿ ನಿಟ್ಟಿನಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೈಗೊಂಡಿರುವ ಕ್ರಮಗಳನ್ನು ನಾರಾಯಣ ಮೂರ್ತಿ ಶ್ಲಾಘಿಸಿದ್ದಾರೆ ಎಂದೂ ಚಟರ್ಜಿ ನುಡಿದರು.