ವಿದ್ಯುತ್ ಭಿಕ್ಷಾಟನೆಗೆ ದೆಹಲಿಯತ್ತ ಮುಖ್ಯಮಂತ್ರಿ ಡಿವಿಎಸ್
'ರಾಜ್ಯವು ತೀವ್ರ ವಿದ್ಯುತ್ ಕ್ಷಾಮ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗ್ರಿಡ್ನಿಂದ ಹಂಚಿಕೆಯಾಗದ ಕೋಟಾದಡಿ ಪ್ರತಿದಿನ 500 ಮೆಗಾವ್ಯಾಟ್ ವಿದ್ಯುತ್ ಪೂರೈಸಲು ಹಾಗೂ ರಾಜ್ಯದ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಿಗೆ ಹೆಚ್ಚುವರಿಯಾಗಿ ಪ್ರತಿನಿತ್ಯ 10 ಸಾವಿರ ಟನ್ ಕಲ್ಲಿದ್ದಲು ಒದಗಿಸಲು ಕ್ರಮ ಜರುಗಿಸಬೇಕು' ಎಂದು ಮುಖ್ಯಮಂತ್ರಿ ಡಿ.ವಿ.ಎಸ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಸಾಧ್ಯತೆ ಇದೆ.
ಕೇಂದ್ರ ಇಂಧನ ಸಚಿವ ಸುಶೀಲ್ಕುಮಾರ್ ಶಿಂಧೆ ಮತ್ತು ಕಲ್ಲಿದ್ದಲು ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ಅವರನ್ನು ಇಂದು ಸಂಜೆ ಭೇಟಿ ಮಾಡಿ, ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಅಭಾವ ಮತ್ತು ಕಲ್ಲಿದ್ದಲು ಕೊರತೆಯಿಂದ ರಾಜ್ಯದ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳ ಮೇಲೆ ಆಗಿರುವ ಪ್ರತಿಕೂಲ ಪರಿಣಾಮ ವಿವರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಆಗ್ರಹಿಸಿ ನಡೆಯುತ್ತಿರುವ ಹೋರಾಟದ ಕಾರಣ ಆಂಧ್ರಪ್ರದೇಶದ ಸಿಂಗರೇಣಿಯಿಂದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರಕ್ಕೆ ಕಲ್ಲಿದ್ದಲು ಪೂರೈಕೆ ಆಗುತ್ತಿಲ್ಲ. ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನಿಂದ ಪೂರೈಕೆಯಾಗುತ್ತಿರುವ ಕಲ್ಲಿದ್ದಲು ಆರ್ಟಿಪಿಎಸ್ನ 8 ಘಟಕಗಳಿಗೆ ಸಾಕಾಗುತ್ತಿಲ್ಲ. ಈ ಪೈಕಿ 4-5 ಘಟಕಗಳಲ್ಲಿ ಮಾತ್ರ ಪ್ರಸ್ತುತ ವಿದ್ಯುತ್ ಉತ್ಪಾದನೆ ಆಗುತ್ತಿದೆ ಎಂದು ಗೌಡರು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಿದ್ದಾರೆ.