ಯಡಿಯೂರಪ್ನೋರ ವಿರುದ್ಧ ಕ್ರಮ ಕೈಗಳ್ಳೋದೆ?: ನೋ ಛಾನ್ಸ್!

ಇದೇ ವೇಳೆ, ಬಿಜೆಪಿಯ ಹಿರಿಯ ನಾಯಕ ಅಡ್ವಾಣಿ ಅವರ ಹೇಳಿಕೆಯನ್ನೂ ಗಮನಿಸಿದ್ದೇನೆ. ಆದರೆ, ಅವರೂ ಯಡಿಯೂರಪ್ಪ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಮಾತನಾಡಿಲ್ಲ ಎಂದು ಡಿ.ವಿ.ಎಸ್ ಗಮನಸೆಳೆದಿದ್ದಾರೆ. ನವದೆಹಲಿಯಲ್ಲಿ ಇಂದು ನಡೆಯಲಿರುವ ರಾಷ್ಟ್ರೀಯ ಅಭಿವೃದ್ದಿ ಮಂಡಳಿ ಸಭೆಯಲ್ಲಿ ಭಾಗವಹಿಸಲು ಸದಾನಂದಗೌಡ ಇಲ್ಲಿಗೆ ಶುಕ್ರವಾರ ಆಗಮಿಸಿದ್ದಾರೆ.
ನ್ಯಾಯಾಂಗ ಬಂಧನದಲ್ಲಿದ್ದು ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಯಡಿಯೂರಪ್ಪ ಅವರನ್ನು ನೋಡಲು ಹೋಗಿದ್ದು ಮಾನವೀಯತೆಯಿಂದ. ಇದನ್ನು ನಾನು ಸಮರ್ಥಿಸಿಕೊಳ್ಳುತ್ತೇನೆ. ಅವರು ನಮ್ಮ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದಾರೆ. ಹೀಗಾಗಿ ನೋಡಲು ಹೋಗಿದ್ದೆ. ಇದರಲ್ಲಿ ಯಾವ ತಪ್ಪೂ ಇಲ್ಲ.
ತನಿಖೆಗೆ ನಾವು ಯಾವುದೇ ಅಡ್ಡಿ ಮಾಡಿಲ್ಲ, ಮಾಡುವುದೂ ಇಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಆದರೆ, ನಮ್ಮ ಸರಕಾರ ಯಾರನ್ನೂ ರಕ್ಷಣೆ ಮಾಡುವ ಅಥವಾ ಬಲಿಪಶು ಮಾಡುವ ಕೆಲಸ ಮಾಡುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಡಿ.ವಿ.ಎಸ್ ಸ್ಪಷ್ಟಣೆ ನೀಡಿದರು.
ಮಾಜಿ ಮುಖ್ಯಮಂತ್ರಿಯನ್ನು ನಾನು ನೋಡಲು ಹೋಗಿದ್ದು ಆಸ್ಪತ್ರೆಗೆ ವಿನಾ ಜೈಲಿಗಲ್ಲ. ಆರೂವರೆ ಕೋಟಿ ಕನ್ನಡಿಗರಲ್ಲಿ ಯಾರನ್ನು ಬೇಕಾದರೂ ನೋಡಲು ನಾನು ಆಸ್ಪತ್ರೆಗೆ ಹೋಗುತ್ತೇನೆ. ನನ್ನನ್ನು ತಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಟೀಕಾಕಾರರಿಗೆ ತಿರುಗೇಟು ಕೊಟ್ಟರು.
ಇನ್ನು, ಸಚಿವ ಅಶೋಕ್ ವಿರುದ್ದದ ಪ್ರಕರಣ ತನಿಖೆಯ ಹಂತದಲ್ಲಿ ಇರುವುದರಿಂದ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದೂ ಅವರು ಹೇಳಿದರು. ಗೃಹ ಸಚಿವ ಆರ್. ಅಶೋಕ್ ವಿರುದ್ಧದ ಭೂ ಹಗರಣ ಆರೋಪದಕ್ಕೆ ಸಂಬಂಧಿಸಿದಂತೆ ಕಾನೂನು ಉತ್ತರಿಸಲಿದೆ. ಪ್ರಕರಣ ನ್ಯಾಯಾಲಯದಲ್ಲಿದ್ದು, ತಾನು ಯಾವುದೇ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ ಎಂದು ಸಿಎಂ ಸದಾನಂದಗೌಡ ತಿಳಿಸಿದ್ದಾರೆ.












Click it and Unblock the Notifications