ರವಿಶಂಕರ್ ಗುರೂಜಿ ಆಶ್ರಮ ಅಕ್ರಮ: ಹೈಕೋರ್ಟ್ ನೋಟಿಸ್
ಈ ಹಿನ್ನೆಲೆಯಲ್ಲಿ ವಿವಾದಿತ ಜಾಗದಲ್ಲಿ ಯಾವುದೇ ಕಾಮಗಾರಿಗಳ ನಡೆಸದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರವಿಶಂಕರ್ ಗುರೂಜಿಯ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ಆದೇಶ ನೀಡಿದೆ.
ವಕೀಲ ಶ್ರೀರಾಮರೆಡ್ಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯ ಮೂರ್ತಿ ವಿ.ಜೆ. ಸೇನ್ ಮತ್ತು ನ್ಯಾ.ಎ.ಎಸ್. ಬೋಪಣ್ಣ ಅವರಿದ್ದ ವಿಭಾಗೀಯ ಪೀಠ, ವಿವಾದಿತ ಪ್ರದೇಶದಲ್ಲಿ ಯಥಾಸ್ಥಿತಿ ಕಾಪಾಡುವಂತೆ ನಿರ್ದೇಶಿಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣಾ ಹೇಳಿಕೆ ಸಲ್ಲಿಸುವಂತೆ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ನಿರ್ದೇಶಿಸಿದ ಮುಖ್ಯ ನ್ಯಾಯಮೂರ್ತಿ, ವಿಚಾರಣೆಯನ್ನು ಡಿ. 13ಕ್ಕೆ ಮುಂದೂಡಿದರು.
ಪ್ರಕರಣದ ತಿರುಳೇನು?: ಕಗ್ಗಲೀಪುರ ಬಳಿ ಸರ್ವೇ ನಂ. 46ರಲ್ಲಿರುವ ಉದಯಪಾಳ್ಯ ಕೆರೆ ಸೇರಿದಂತೆ ಸುತ್ತಮುತ್ತಲ ಅರಣ್ಯ ಭೂಮಿಯನ್ನು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಒತ್ತುವರಿ ಮಾಡಿಕೊಂಡಿದೆ. ಕೆರೆಯ ಸುತ್ತಮುತ್ತ 14.18 ಹೆಕ್ಟೇರ್ ನೀರಾವರಿ ಪ್ರದೇಶ, 42.52 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶ ಮತ್ತು 1.6 ಮೀ. ಕಾಲುವೆಯನ್ನು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಒತ್ತುವರಿ ಮಾಡಿಕೊಂಡಿದೆ. ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸುವಂತೆ ಸಣ್ಣ ನೀರಾವರಿ ಇಲಾಖೆಗೆ ಆದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.