ಕರ್ನಾಟಕದ ಆರನೇ ಒಂದು ಭಾಗ ಪೂರ್ತಿ ಬಂದ್
ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳಲ್ಲಿ ಜನ ಜೀವನ ಅಸ್ತವ್ಯಸ್ಥವಾಗಿತ್ತು. ಸಂಚಾರ ವ್ಯವಸ್ಥೆ ಸ್ಥಗಿತಗೊಂಡು ಅನೇಕ ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲೇ ನಿದ್ರಿಸುತ್ತಿದ್ದ ದೃಶ್ಯ ಕಂಡು ಬಂದಿತು.
ವ್ಯಾಪಾರಿಗಳು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಭಾರಿ ಬೆಂಬಲ ವ್ಯಕ್ತಪಡಿಸಿದರು. ಖಾಸಗಿ ಬಸ್ ಹಾಗೂ ಆಟೋ ಸಂಚಾರ ವ್ಯವಸ್ಥೆ ಕೂಡಾ ನಿಲ್ಲಿಸಿದ್ದರಿಂದ ಜನರು ಊರಿಂದ ಊರಿಗೆ ಹೋಗಲು ಪರದಾಡುತ್ತಿದ್ದರು.
ಸಂವಿಧಾನದ ಕಲಂ ತಿದ್ದುಪಡಿಗೆ ಆಗ್ರಹ: ಪ್ರಾದೇಶಿಕ ಅಸಮಾನತೆಯಿಂದ ನರಳುತ್ತಿರುವ ಐದು ಜಿಲ್ಲೆಗಳು ಶೈಕ್ಷಣಿಕ, ಆರ್ಥಿಕ ಹಾಗೂ ಔದ್ಯೋಗಿಕ ಕ್ಷೇತ್ರಗಳಲ್ಲಿ ಅತ್ಯಂತ ಹಿಂದುಳಿದಿದೆ.
ಸಂವಿಧಾನದ 371ನೇ ಕಲಂಗೆ ತಿದ್ದುಪಡಿ ತಂದು ಆಂಧ್ರಪ್ರದೇಶದ ತೆಲಂಗಾಣ, ಮಹಾರಾಷ್ಟ್ರದ ವಿದರ್ಭ ಮಾದರಿಯಲ್ಲಿ ಸರ್ವಾಂಗೀಣ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಒದಗಿಸುವಂತೆ ಒತ್ತಾಯಿಸಲಾಗಿದೆ.
ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಮುಖಂಡ ವೈಜನಾಥ್ ಪಾಟೀಲ್ ನೇತೃತ್ವದಲ್ಲಿ ನಡೆದ ಬಂದ್ ಗೆ ಸಾರ್ವಜನಿಕರಿಂದಲೂ ವ್ಯಾಪಕ ಬೆಂಬಲ ವ್ಯಕ್ತವಾಯಿತು.
ಅಲ್ಲಲ್ಲಿ ಪ್ರತಿಭಟನೆ, ಬೈಕ್ ಸವಾರರ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸರ್ಕಾರ ಏನು ಹೇಳುತ್ತದೆ?: ಈ ಭಾಗದಿಂದಲೇ ಆಯ್ಕೆಯಾಗಿರುವ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ಧರ್ಮಸಿಂಗ್ ಅವರು ಕೇಂದ್ರದ ಮೇಲೆ ಒತ್ತಡ ಹೇರಿ ಅನುದಾನ ಪಡೆಯಲು ವಿಫಲರಾಗಿದ್ದಾರೆ.
ರಾಜ್ಯದ ನಿಯೋಗ ದೆಹಲಿಗೆ ತೆರಳಿದ್ದಾಗ ಗೃಹ ಸಚಿವರು ನೀಡಿದ್ದ ಭರವಸೆ ಹುಸಿಯಾಗಿದೆ ಎಂದು ಮುಖ್ಯಮಂತ್ರಿ ಡಿವಿ ಸದಾನಂದ ಗೌಡರು ಪ್ರತಿಕ್ರಿಯಿಸಿದ್ದಾರೆ.