ಅಭಿಮಾನಿಗಳ ಪ್ರೀತಿಯಲ್ಲಿ ಮಿಂದೆದ್ದ ಯಡಿಯೂರಪ್ಪ
ಗೈರು ಹಾಜರಾದವರು: ಯಡಿಯೂರಪ್ಪ ತವರಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಅವರ ಬೆಂಬಲಿಗರ ಪಡೆಯವರು ಗೈರು ಹಾಜರಾಗಿದ್ದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾನುಪ್ರಕಾಶ್, ಎಂಪಿಎಂ ಅಧ್ಯಕ್ಷ ಆರಗ ಜ್ಞಾನೇಂದ್ರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್. ಕೆ. ಸಿದ್ದರಾಮಣ್ಣ, ಮಲೆನಾಡು ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಪದ್ಮನಾಭ ಭಟ್, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಗಿರೀಶ್ ಪಟೇಲ್, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸೂಡಾ ಅಧ್ಯಕ್ಷ ಎಸ್. ದತ್ತಾತ್ರಿ, ನಗರಸಭೆಯ ಅಧ್ಯಕ್ಷ ಚನ್ನಬಸಪ್ಪ ಮತ್ತಿತರರು ಗೈರು ಹಾಜರಾಗಿದ್ದು ಎದ್ದು ಕಾಣುತ್ತಿತ್ತು.
ಅಭಿನಂದನಾ ಸಮಾವೇಶಕ್ಕೆ ಮುನ್ನ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅದ್ಧೂರಿ ಮೆರವಣಿಗೆ ನಡೆಯಿತು. ರವೀಂದ್ರ ನಗರದ ಬಲಮುರಿ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಮೆರವಣಿಗೆಯುದ್ದಕ್ಕೂ ಬಿ.ಎಸ್.ವೈ ಅಭಿಮಾನಿಗಳ ಜಯಘೋಷಗಳು ಮುಗಿಲು ಮುಟ್ಟಿದ್ದವು. ಮೆರವಣಿಗೆ ಜಾತ್ರೆಯ ಉತ್ಸವದಂತೆ ಗೋಚರಿಸುತ್ತಿತ್ತು.
ಮಂಗಳ ವಾದ್ಯ, ಮಹಿಳೆಯರ ವೀರಗಾಸೆ: ಸವಿತಾ ಸಮಾಜದವರ ಮಂಗಳ ವಾದ್ಯ, ಡೊಳ್ಳು ಕುಣಿತ, ಕಂಸಾಳೆ ನೃತ್ಯ, ಕೀಲು ಕುದುರೆ ಕುಣಿತ, ಮಹಿಳೆಯರ ವೀರಗಾಸೆ... ಹೀಗೆ ಹಲವು ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಮೆರವಣಿಗೆಯ ಮೆರುಗನ್ನು ಹೆಚ್ಚಿಸಿದ್ದವು. ಮೆರವಣಿಗೆ ಸಾಗಿಬರುವ ರಸ್ತೆಯನ್ನು ಮದುವಣಗಿತ್ತಿಯಂತೆ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಮೆರವಣಿಗೆಯುದ್ದಕ್ಕೂ ಜನರು ಸಾಲುಗಟ್ಟಿ ನಿಂತಿದ್ದರು. ಮೆರವಣಿಗೆಯಲ್ಲಿ ಮಹಿಳೆಯರೇ ಹೆಚ್ಚಿನ ಪ್ರಮಾಣದಲ್ಲಿದ್ದುದು ವಿಶೇಷವಾಗಿತ್ತು.