ಬಿಎಸ್ವೈ ಸೋಮಣ್ಣ ಸಮನ್ಸ್ ತಡೆಯಾಜ್ಞೆ ತೆರವು

ಜೂನ್ 20ರಂದು ಎಲ್ಲ ಆರೋಪಿಗಳು ಲೋಕಾಯುಕ್ತ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಬೇಕೆಂದು ನ್ಯಾಯಮೂರ್ತಿ ವಿ.ಜಗನ್ನಾಥನ್ ಅವರು ಆದೇಶಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ ಯಡಿಯೂರಪ್ಪ, ಸೋಮಣ್ಣ ಮತ್ತಿತರರು ಖುದ್ದಾಗಿ ನ್ಯಾಯಾಲಯದ ಮುಂದೆ ಹಾಜರಾಗಬೇಕಾಗಿದೆ.
ಕೆಂಗೇರಿ ಹೋಬಳಿಯ ನಾಗದೇವನಹಳ್ಳಿಯಲ್ಲಿ 22 ಗುಂಟೆ ಜಮೀನನ್ನು ಕಾನೂನುಬಾಹಿರವಾಗಿ ಡಿನೋಟಿಫೈ ಮಾಡಲಾಗಿದೆಯೆಂದು ಯಡಿಯೂರಪ್ಪ, ಸೋಮಣ್ಣ, ಅವರ ಪತ್ನಿ ಶೈಲಜಾ, ಭೂಮಿಯ ಮಾಲಿಕ ಲಿಂಗಯ್ಯ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ದೂರನ್ನು ರವಿಕೃಷ್ಣಾ ರೆಡ್ಡಿ ಎಂಬುವವರು ನೀಡಿದ್ದರು.
ನಾಗದೇವನಹಳ್ಳಿಯಲ್ಲಿ ಬಿಡಿಎ ವಶಪಡಿಸಿಕೊಂಡಿದ್ದ 22 ಗುಂಟೆ ಜಮೀನಿನ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವುದು ಕಾನೂನುಬಾಹಿರವಾಗಿದೆ ಎಂದು ಸಾಫ್ಟ್ವೇರ್ ಇಂಜಿನಿಯರ್ ನವೆಂಬರ್ 17ರಂದು ದೂರು ಸಲ್ಲಿಸಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.
ಆಗಿದ್ದೇನೆಂದರೆ, ಜ್ಞಾನಭಾರತಿ ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ಭೂ ಸ್ವಾಧೀನಪಡಿಸಿಕೊಂಡಿತ್ತು. 1997ರಲ್ಲಿ 3.40 ಎಕರೆ ಭೂಮಿಯನ್ನು ವಶಕ್ಕೆ ಪಡೆಯಲಾಗಿತ್ತು. ಅದರಲ್ಲಿ 22 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಐ ಮಾಡಿ ಸೋಮಣ್ಣ ಅವರು ತಮ್ಮ ಪತ್ನಿ ಶೈಲಜಾ ಅವರ ಹೆಸರಿನಲ್ಲಿ ಕೊಂಡಿದ್ದರು ಎಂದು ದೂರಲಾಗಿದೆ.
ಇದರ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಲೋಕಾಯುಕ್ತ ಕೋರ್ಟಿಗೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ, ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟನ್ನು ತಿರಸ್ಕರಿಸಿದ್ದ ಲೋಕಾಯುಕ್ತ ನ್ಯಾಯಾಧೀಶರು ಎಲ್ಲ ಆರೋಪಿಗಳ ವಿರುದ್ಧ ಸಮನ್ಸ್ ಜಾರಿ ಮಾಡಿದ್ದರು.












Click it and Unblock the Notifications