ಹೈ-ಕರ್ನಾಟಕಕ್ಕೆ ಕೊನೆಗೂ ವಿಶೇಷ ಸ್ಥಾನಮಾನ ಭಾಗ್ಯ

ಇದರೊಂದಿಗೆ ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳ ಜನರಿಗೆ ಭಾಗ್ಯದ ಬಾಗಿಲು ತೆರೆದಂತಾಗಿದೆ. ಮುಖ್ಯವಾಗಿ, ಈ ಪ್ರಸ್ತಾವನೆ ಜಾರಿಯಾದರೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಹೈದರಾಬಾದ್-ಕರ್ನಾಟಕ ಭಾಗ ಜನರಿಗೆ ಪ್ರತ್ಯೇಕ ಮೀಸಲಾತಿ ಸೌಲಭ್ಯ ಒದಗಿಸಲಿದೆ.
ಹೋರಾಟಕ್ಕೆ ಸಿಕ್ಕ ಗೆಲುವು: ಇದು ಹೈದರಾಬಾದ್-ಕರ್ನಾಟಕ ಪ್ರದೇಶದ ಜನತೆಗೆ ಸಿಕ್ಕ ಗೆಲುವು. ಹಲವು ವರ್ಷಗಳಿಂದಲೂ ಅನೇಕ ಸಂಘಟನೆಗಳು ನಡೆಸುತ್ತಿದ್ದ ಹೋರಾಟಕ್ಕೆ ಕೇಂದ್ರ ಸರ್ಕಾರ ಕೊನೆಗೂ ಸ್ಪಂದಿಸಿ, 371ಜೆ ಕಲಂ ತಿದ್ದುಪಡಿಗೆ ಮುಂದಾಗಿರುವುದು ಜನರಲ್ಲಿ ಹರ್ಷ ಮೂಡಿಸಿದೆ. ಉದ್ಯೋಗ, ಶಿಕ್ಷಣ ಕ್ಷೇತ್ರದಲ್ಲಿ ಈ ಭಾಗದ ಜನತೆಗೆ ವಿಶೇಷ ಮೀಸಲಾತಿ ಸಿಗಲಿದೆ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರದ ಯುಪಿಎ ಸರ್ಕಾರ ಸಂವಿಧಾನದ 371ಜೆ ಕಲಮಿಗೆ ತರಲು ಹೊರಟಿರುವ ತಿದ್ದುಪಡಿ ಮಸೂದೆ ಮಹಾರಾಷ್ಟ್ರದ ವಿದರ್ಭ ಹಾಗೂ ಆಂಧ್ರದ ತೆಲಂಗಾಣಕ್ಕಿಂತ ಉತ್ತಮವಾದ ಅಂಶಗಳನ್ನು ಒಳಗೊಂಡಿದೆ ಎಂದು ತಿಳಿದುಬಂದಿದೆ.
ಇದು ಸಂವಿಧಾನ ತಿದ್ದುಪಡಿ ಮಸೂದೆ ಆಗಿರುವುದರಿಂದ ಉಭಯ ಸದನಗಳ 2/3ರಷ್ಟು ಬಹುಮತದ ಅಗತ್ಯವಿದೆ. ಆದರೆ, ಹೈದರಾಬಾದ್-ಕರ್ನಾಟಕದ ವಿಶೇಷ ಸ್ಥಾನಮಾನಕ್ಕೆ ಎರಡು ದಶಕಗಳಿಂದ ಪಕ್ಷಾತೀತವಾಗಿ ಹೋರಾಟ ನಡೆದಿದ್ದು ಎಲ್ಲ ರಾಜಕೀಯ ಪಕ್ಷಗಳು ಚಳವಳಿಗೆ ಬೆಂಬಲ ವ್ಯಕ್ತಪಡಿಸಿವೆ.
ಅನೇಕ ಸಲ ಸರ್ವಪಕ್ಷಗಳ ನಿಯೋಗ ದೆಹಲಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮಸೂದೆ ಯಾವುದೇ ವಿರೋಧವೂ ಇಲ್ಲದೆ ಸರ್ವಾನುಮತದಿಂದ ಅಂಗೀಕಾರವಾಗುವ ಸಾಧ್ಯತೆ ಇದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಗಮನಾರ್ಹವೆಂದರೆ ಹಿಂದಿನ ಎನ್ಡಿಎ ಸರ್ಕಾರ ವಿಶೇಷ ಸ್ಥಾನಮಾನದ ಬೇಡಿಕೆಯನ್ನು ತಳ್ಳಿಹಾಕಿತ್ತು.
ಸಂವಿಧಾನದ 371 ಜೆ ಕಲಮಿಗೆ ತಿದ್ದುಪಡಿ ತಂದು ಮಸೂದೆ ಜಾರಿಗೆ ಬಂದ ಬಳಿಕ ರಾಜ್ಯ ಸರ್ಕಾರ ಈ ಸಂಬಂಧ ಪ್ರತ್ಯೇಕ ನಿಯಮಾವಳಿ ರೂಪಿಸಬೇಕಾದ ಅಗತ್ಯವಿದೆ. ಅಲ್ಲದೆ, ಮಸೂದೆ ಈ ಭಾಗದ ಅಭಿವೃದ್ಧಿಗೆ ಪ್ರತ್ಯೇಕ ಮಂಡಳಿ ಸ್ಥಾಪನೆಗೆ ಅವಕಾಶ ಕಲ್ಪಿಸಲಿದೆ.












Click it and Unblock the Notifications