ಭಟ್, ಸಿಂಹ, ಸಂಕೇಶ್ವರ್ ಹತ್ಯೆಗೆ ಉಗ್ರರ ಸಂಚು!
ಬೆಂಗಳೂರಿನ ಮುನಿರೆಡ್ಡಿ ಪಾಳ್ಯ ಮತ್ತು ಹಳೆ ಹುಬ್ಬಳ್ಳಿಯ ಯಲ್ಲಾಪುರು ಓಣಿಯಲ್ಲಿ ಅವಿತುಕೊಂಡಿದ್ದ 11 ಉಗ್ರರನ್ನು ಬೆಂಗಳೂರಿನ ಸಿಟಿ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಅವರನ್ನು ಪೊಲೀಸರು ನಿಗೂಢ ಸ್ಥಳಕ್ಕೆ ಕರೆದುಕೊಂಡು ಹೋಗಿ ವಿಚಾರಣೆಗೆ ಗುರಿಪಡಿಸಿದ್ದರು.
ಈ ವಿಚಾರಣೆಯಲ್ಲಿ ಖ್ಯಾತ ಪತ್ರಕರ್ತ ವಿಶ್ವೇಶ್ವರ ಭಟ್, ಅಂಕಣಕಾರ ಪ್ರತಾಪ್ ಸಿಂಹ, ವಿಜಯವಾಣಿ ಮಾಲಿಕ ವಿಜಯ ಸಂಕೇಶ್ವರ, ಧಾರವಾಡದ ಸಂಸದ ಪ್ರಹ್ಲಾದ ಜೋಶಿ ಮತ್ತು ಭಜರಂಗದಳದ ಕಾರ್ಯಕರ್ತರನ್ನು ಮುಗಿಸಿಹಾಕಲು ಇಂಡಿಯನ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಈ ಭಯೋತ್ಪಾದಕರು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ.
ಉಗ್ರರು ರೂಪಿಸಿದ್ದ ಸಂಚು ಮತ್ತು ಅವರ ಅಡಗುತಾಣಗಳ ಬಗ್ಗೆ ಉತ್ತರ ಪ್ರದೇಶದ ಪೊಲೀಸರು ಸುಳಿವನ್ನು ನೀಡಿದ್ದರು. ಇದರ ಆಧಾರದ ಮೇಲೆ ದಾಳಿ ನಡೆಸಿದ್ದ ಪೊಲೀಸರು ಪ್ರಮುಖ ಆಂಗ್ಲ ದಿನಪತ್ರಿಕೆಯಲ್ಲಿ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದ ಪತ್ರಕರ್ತ ಸೇರಿದಂತೆ 11 ಜನರನ್ನು ಬಂಧಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದರು.
2010ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಗುರುವಾರ ಕೂಡ ನಾಲ್ಕು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಬಂಧಿಸಿದ ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಪೊಲೀಸ್ ಮಹಾನಿರ್ದೇಶಕ ಪಚಾವೋ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಬಂಧಿತರ ಬಗ್ಗೆ ವಿವರ ನೀಡಿದ್ದರು. ಲಷ್ಕರ್-ಎ-ತಯ್ಬಾ, ಹೂಜಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದನಾ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ ಉಗ್ರರ ವಿವರ ನೀಡಿದ್ದರು.
ಸೌದಿ ಅರೇಬಿಯಾದ ಉಗ್ರರ ಅಣತಿಯಂತೆ ಸಂಚು ರೂಪಿಸಿದ್ದ ಉಗ್ರರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಉಗ್ರರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120ಬಿ, 153ಎ, 379 ಅಡಿಗಳಲ್ಲಿ ಕೇಸ್ ದಾಖಲಿಸಲಾಗಿದೆ. ವಿಚಾರಣೆ ಇನ್ನೂ ನಡೆಯುತ್ತಿದ್ದು, ಇದಕ್ಕಿಂತ ಹೆಚ್ಚಿನ ಮಾಹಿತಿ ಈಗಲೆ ನೀಡಲಾಗುವುದಿಲ್ಲ ಎಂದು ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಹೇಳಿದರು.