ಐಎಎಸ್ ಕತ್ತರಿ: ಪಿಯು ಮಂಡಳಿ ರಶ್ಮಿ ವರ್ಗಾವಣೆ
ಪಿಯು ಮಂಡಳಿಯ ಆಯುಕ್ತರಾಗಿದ್ದ ಜೆ.ರಶ್ಮಿ ಮಹೇಶ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಯಾಗಿ, ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ. ರಂಗಸ್ವಾಮಿ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಇದೇ 30ರಂದು ನಿವೃತ್ತರಾಗುತ್ತಿರುವ ಅಶೋಕ್ ಕುಮಾರ್ ಮನೋಳಿ ಅವರ ಸ್ಥಾನಕ್ಕೆ ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಲತಾ ಕೃಷ್ಣ ರಾವ್ ಅವರನ್ನು ನೇಮಿಸಲಾಗಿದೆ.
ಕೆ.ಪಿ. ಕೃಷ್ಣನ್ ಅವರನ್ನು ಹೊಸದಾಗಿ ಸೃಷ್ಟಿಸಲಾದ ದೆಹಲಿಯ ಕರ್ನಾಟಕ ಭವನದ ವಿಶೇಷಾಧಿಕಾರಿಯನ್ನಾಗಿ, ಕೆ. ಶಿವರಾಮು ಅವರನ್ನು ಸಾರ್ವಜನಿಕ ಉದ್ದಿಮೆಗಳ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಬೆಂಗಳೂರು ವಿಭಾಗದ ವಿಭಾಗೀಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಈ ಹುದ್ದೆಯಲ್ಲಿದ್ದ ರಾಜೀವ್ ಚಾವ್ಲಾ ಅವರನ್ನು ಸಾರ್ವಜನಿಕ ಉದ್ದಿಮೆಗಳ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಿಯೋಜಿಸಲಾಗಿದೆ.
ಕೆಪಿಎಸ್ಸಿ ಕಾರ್ಯದರ್ಶಿ ಜೆ.ಬಿ.ಪಾಟೀಲ್ ಅವರನ್ನು ಮೈಸೂರು ಮಿನರಲ್ಸ್ ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ, ಐಟಿ-ಬಿಟಿ ಇಲಾಖೆ ನಿರ್ದೇಶಕ ಚಕ್ರವರ್ತಿ ಮೋಹನ್ ಅವರನ್ನು ಪಿಯು ಮಂಡಳಿ ನಿರ್ದೇಶಕ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಸ್ಥಾನಕ್ಕೆ ನಿಯೋಜಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿದ್ದ ಪಿ. ಹೇಮಲತಾ ಅವರನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಕೆಎಸ್ಆರ್ ಎಲ್ ಬಿಎಸ್ ನ ನಿರ್ದೇಶಕರಾಗಿ, ಗುಲ್ಬರ್ಗಾ ಜಿಲ್ಲಾಧಿಕಾರಿಯಾಗಿದ್ದ ಡಾ.ವಿಶಾಲ್ ಅವರನ್ನು ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದ ಆಯುಕ್ತರನ್ನಾಗಿ, ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿದ್ದ ವಿಪುಲ್ ಬನ್ಸಾಲ್ ಅವರನ್ನು ಸರ್ವಶಿಕ್ಷಣಾ ಅಭಿಯಾನದ ಯೋಜನಾ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.
ರಾಯಚೂರು ಜಿಲ್ಲಾಪಂಚಾಯತ್ ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಮನೋಜ್ ಜೈನ್ ಅವರನ್ನು ಹುಬ್ಬಳ್ಳಿಯ ರಸ್ತೆ ಸಾರಿಗೆ ನಿಗಮಕ್ಕೆ. ರಾಜ್ಯ ನವೀಕೃತ ಇಂಧನ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎನ್.ಎಸ್. ಪ್ರಸನ್ನ ಕುಮಾರ್ ಅವರನ್ನು ಗುಲ್ಬರ್ಗಾ ಜಿಲ್ಲಾಧಿಕಾರಿಯಾಗಿ, ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥ್ಧಾಪಕ ನಿರ್ದೇಶಕರಾಗಿದ್ದ ಕಪಿಲ್ ಮೋಹನ್ ಅವರಿಗೆ ನವೀಕೃತ ಇಂಧನ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯ ಆಯುಕ್ತರಾಗಿದ್ದ ವಿ.ಪಿ. ಇಕ್ಕೇರಿ ಅವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ, ನೇಮಕಾತಿ ನಿರೀಕ್ಷೆಯಲ್ಲಿರುವ ಎಸ್.ಎನ್. ನಾಗರಾಜು ಅವರನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹೆಚ್ಚುವರಿ ನಿರ್ದೇಶಕ ಹುದ್ದೆಗೆ, ಬಿ.ಎಫ್. ಪಾಟೀಲ್ ಅವರನ್ನು ಬಿಬಿಎಂಪಿ ಹೆಚ್ಚುವರಿ ಆಯುಕ್ತ ಸ್ಥಾನದಿಂದ ಕೊಳಚೆ ನಿರ್ಮೂಲನಾ ಮಂಡಳಿಯ ಆಯುಕ್ತರನ್ನಾಗಿ ನೇಮಿಸಲಾಗಿದೆ.
ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಫ್.ಆರ್. ಜಾಮದಾರ್ ಅವರನ್ನು ಯಾದಗಿರಿಯ ಜಿಲ್ಲಾಧಿಕಾರಿಯಾಗಿ, ನೇಮಕಾತಿ ನಿರೀಕ್ಷೆಯಲ್ಲಿದ್ದ ಹೇಮರಾಜ್ ನಾಯಕ್ ಅವರನ್ನು ರಾಯಚೂರು ಜಿಲ್ಲಾ ಪಂಚಾಯ್ತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ನೇಮಿಸಲಾಗಿದೆ. ನೇಮಕಾತಿ ನಿರೀಕ್ಷೆಯಲ್ಲಿದ್ದ ಮೊಹಮದ್ ಸಲಾವುದ್ದೀನ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿಶೇಷ ಆರ್ಥಿಕ ಯೋಜನಾ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.
ಹಾಸನ ಜಿಲ್ಲಾ ಪಂಚಾಯ್ತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿದ್ದ ಎಸ್.ಟಿ. ಅಂಜನ್ ಕುಮಾರ್ ಅವರನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ, ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ವಿ. ಗೀತಾಂಜಲಿ ಅವರನ್ನು ಅವರನ್ನು ಬೀದರ್ ಜಿಲ್ಲಾ ಪಂಚಾಯತ್ ನ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ, ಉದ್ಯೋಗ ಖಾತ್ರಿ ಯೋಜನೆಯ ಜಂಟಿ ನಿರ್ದೇಶಕ ಮೀರ್ ಅನೀಸ್ ಅಹಮದ್ ಅವರನ್ನು ಕೋಲಾರ ಜಿಲ್ಲಾ ಪಂಚಾಯತ್ ನ ಮುಖ್ಯಕಾರ್ಯ ನಿರ್ವಹಣಾಧಿಕಾರಿಯಾಗಿ ನಿಯೋಜಿಸಲಾಗಿದೆ.