ಅಂತಾರಾಷ್ಟ್ರೀಯ ದರ್ಜೆಗೆ ಮಂಗಳೂರು ಏರ್ಪೋರ್ಟ್
ಗುರುವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ಮಹತ್ವದ ಘೋಷಣೆಯನ್ನು ಮಾಡಲಾಯಿತು. ಕೇಂದ್ರ ವಿಮಾನಯಾನ ಸಚಿವ ಅಜಿತ್ ಸಿಂಗ್ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಒಪ್ಪಿಕೊಂಡಿದ್ದಾರೆ. ಏರ್ಪೋರ್ಟ್ ನಿರ್ದೇಶಕರಾಗಿರುವ ಎಮ್ಆರ್ ವಾಸುದೇವ ಅವರು ನಿವೃತ್ತಿಯಾಗುವ ಮೊದಲೇ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆಯಾಗುವ ಆಶಾಭಾವನೆಯನ್ನು ಮೊಯ್ಲಿ ವ್ಯಕ್ತಪಡಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ದರ್ಜೆಯದೆಂದು ಘೋಷಿಸಬೇಕೆಂದು ಉಡುಪಿ-ಚಿಕ್ಕಮಗಳೂರು ಸಂಸದ ಕೆ. ಜಯಪ್ರಕಾಶ್ ಹೆಗಡೆಯವರು ಕೂಡ ಕೇಂದ್ರ ವಿಮಾನಯಾನ ಸಚಿವಾಲಯದ ಜೊತೆ ಮಾತುಕತೆ ನಡೆಸಿದ್ದರು. ತ್ವರಿತವಾಗಿ ಅಂತಾರಾಷ್ಟ್ರೀಯ ದರ್ಜೆಯ ಪಟ್ಟ ಸಿಕ್ಕಿದ್ದು ತುಂಬಾ ಸಂತೋಷ ತಂದಿದೆ ಎಂದು ಹೆಗಡೆ ಹರ್ಷ ವ್ಯಕ್ತಪಡಿಸಿದ್ದಾರೆ.
ಮೇ 22ರ 2010ರಂದು ನಡೆದ ಭೀಕರ ವಿಮಾನ ದುರಂತದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಕಪ್ಪುಚುಕ್ಕೆ ಅಂಟಿಕೊಂಡಿತ್ತು. ಎರಡು ವರ್ಷದ ಅವಧಿಯಲ್ಲಿ ವಿಮಾನ ನಿಲ್ದಾಣ ಸಾಕಷ್ಟು ಅಭಿವೃದ್ಧಿ ಕಂಡಿದ್ದು, ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಏರಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಿಟ್ಟರೆ ಅಂತಾರಾಷ್ಟ್ರೀಯ ಮಟ್ಟದಲ್ಲಿರುವ ನಿಲ್ದಾಣವೆಂದರೆ ಮಂಗಳೂರು ವಿಮಾನ ನಿಲ್ದಾಣವೊಂದೆ.