ಈ ಬಾರಿ 50 ಮಂದಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಕಳೆದ ವರ್ಷ ನಾಲ್ಕು ಸಾವಿರ ಅರ್ಜಿಗಳು ಬಂದಿದ್ದರೆ ಈ ಬಾರಿ ಪ್ರಶಸ್ತಿಗಾಗಿ ಮೂರು ಸಾವಿರ ಜನರು ಅರ್ಜಿ ಗುಜರಾಯಿಸಿದ್ದಾರೆ. ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಜೊತೆ ಚರ್ಚೆ ನಡೆಸಿದ ನಂತರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಅವರು ತಿಳಿಸಿದರು.
ಪ್ರಶಸ್ತಿಗಾಗಿ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಪರಿಗಣಿಸಲಾಗುವುದು. ಯಾವುದೇ ವಶೀಲಿಬಾಜಿಗೆ ಅವಕಾಶ ನೀಡಲಾಗುವುದಿಲ್ಲ. ಅರ್ಹರಿಗೆ ಮಾತ್ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿ ಪಡೆಯಲು ಅರ್ಜಿ ಗುಜರಾಯಿಸಿದವರ ಜೊತೆ ಪ್ರಶಸ್ತಿ ನಿರೀಕ್ಷೆ ಮಾಡಿರದ ಅನೇಕ ಸಾಧಕರನ್ನು ಪ್ರಶಸ್ತಿಗಾಗಿ ಪರಿಗಣಿಸಲಾಗುವುದು ಎಂದು ಅವರು ಹೇಳಿದರು.
ನವೆಂಬರ್ 1ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಯಾರ್ಯಾರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಲಿದೆ? ಸದ್ಯಕ್ಕೆ ಅರ್ಜಿ ಹಾಕಿದವರು ಮತ್ತು ಕುತೂಹಲದಿಂದ ಕಾಯುತ್ತಿರುವವರು ಕೇಳಿಕೊಳ್ಳುತ್ತಿರುವ ಪ್ರಶ್ನೆಯಿದು. ಅಕ್ಟೋಬರ್ 31ರಂದು ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ.
ಕಳೆದ ವರ್ಷ ಪ್ರಶಸ್ತಿ ಪ್ರದಾನ ದಿನವಾದ ನವೆಂಬರ್ 1ರಂದು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿ, ಅಂದು ಕರಾಳ ದಿನ ಆಚರಿಸಿ ಪ್ರತಿಭಟನೆ ನಡೆಸಿದ್ದರು. ಈ ಘಟನೆಯ ನಂತರ ಎಂಇಎಸ್ ಅಧಿಕಾರದಲ್ಲಿದ್ದ ಬೆಳಗಾವಿ ಮಹಾನಗರ ಪಾಲಿಕೆಯನ್ನು ಸೂಪರ್ಸೀಡ್ ಮಾಡಲಾಗಿತ್ತು.