ನಾನು ಪ್ರಧಾನಿ ಅಭ್ಯರ್ಥಿಯಲ್ಲ: ಬರ್ಥಡೇ ಬಾಯ್ ಅಡ್ವಾಣಿ
ನವದೆಹಲಿ, ನ.8: ಬಿಜೆಪಿಯ ಹಿರಿಯ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಅವರು ಗುರುವಾರ (ನ.8) ತಮ್ಮ 85ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂಭ್ರಮದಲ್ಲೇ ಬಿಜೆಪಿಯ ಮುಂದಿನ ಪ್ರಧಾನಮಂತ್ರಿ ಅಭ್ಯರ್ಥಿಯ ಬಗ್ಗೆ ಅಡ್ವಾಣಿ ಹೇಳಿಕೆಯನ್ನು ನೀಡಿದ್ದಾರೆ.
'ನನಗೆ ಪಕ್ಷ ಹಾಗೂ ದೇಶ ಎಲ್ಲವನ್ನು ಕೊಟ್ಟಿದೆ. ವ್ಯಕ್ತಿಗಿಂತ ಪಕ್ಷ ದೊಡ್ಡದು. ನನಗೆ ಈವರೆವಿಗೂ ಸಿಕ್ಕಿರುವ ಪ್ರೀತಿ ವಿಶ್ವಾಸಗಳು ಪ್ರಧಾನಿ ಹುದ್ದೆಗಿಂತ ದೊಡ್ಡದು. ನಾನು ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಲ್ಲ. ಪ್ರಧಾನಿ ಹುದ್ದೆ ರೇಸ್ ನಲ್ಲಿಲ್ಲ' ಎಂದು ಅಡ್ವಾಣಿ ಹೇಳಿದ್ದಾರೆ.
2009ರ ಚುನಾವಣೆ ಸಂದರ್ಭದಲ್ಲಿ ದೇಶದಾದ್ಯಂತ ರಥಯಾತ್ರೆ ನಡೆಸಿದ್ದ ಅಡ್ವಾಣಿ ಅವರು ಪ್ರಧಾನಿ ಪಟ್ಟಕ್ಕೇರುವ ಇಂಗಿತ ವ್ಯಕ್ತಪಡಿಸಿದ್ದರು. ಅದರೆ, 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವ ಯಾರು ವಹಿಸಬೇಕು ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸ್ಪಷ್ಟವಾಗಿ ಸಿಕ್ಕಿಲ್ಲ.
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲು ಅರ್ಧದಷ್ಟು ಬಿಜೆಪಿ ನಾಯಕರು ಸಿದ್ಧರಿದ್ದರೆ, ಉಳಿದರ್ಧ ಇನ್ನೂ ಗೊಂದಲದಲ್ಲಿದೆ.
ಈ ಎಲ್ಲಾ ಗೊಂದಲಗಳ ನಡುವೆ ಅಡ್ವಾಣಿ ಅವರ ಹುಟ್ಟುಹಬ್ಬ ಸಮಾರಂಭಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ಆಗಮಿಸಿದ್ದು ವಿಶೇಷವಾಗಿತ್ತು. ಭೂ ಹಗರಣ, ಭ್ರಷ್ಟಾಚಾರದ ಆರೋಪ ಹೊತ್ತಿರುವ ಗಡ್ಕರಿ ಹಾಗೂ ಅಡ್ವಾಣಿ ಅವರು ಇತ್ತೀಚೆಗೆ ನಡೆದ ಬಿಜೆಪಿ ಕಾರ್ಯಕಾರಿ ಸಭೆಗೆ ಗೈರು ಹಾಜರಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಕಳೆದ ತಿಂಗಳು ನಿತಿನ್ ಗಡ್ಕರಿ ಯಾವ ದೊಡ್ಡ ತಪ್ಪು ಮಾಡಿಲ್ಲ. ಅವರು ತನಿಖೆಗೆ ಸಿದ್ಧ ಎಂದು ಹೇಳಿದ್ದಾರೆ. ಹೀಗಾಗಿ ಅವರನ್ನು ಪಟ್ಟದಿಂದ ಇಳಿಸುವ ಅವಶ್ಯಕತೆ ಇಲ್ಲ ಎಂದು ಅಡ್ವಾಣಿ ಅವರು ತಮ್ಮ ಬ್ಲಾಗ್ ನಲ್ಲಿ ಬೆಂಬಲ ವ್ಯಕ್ತಪಡಿಸಿದ್ದರು.
ಕರ್ನಾಟಕದ ನಾಯಕರಿಂದ ಶುಭಾಶಯ: ಸಂಸದರಾದ ಅನಂತಕುಮಾರ್, ರಾಜೀವ್ ಚಂದ್ರಶೇಖರ್ ಅವರು ಅಡ್ವಾಣಿ ಅವರನ್ನು ಭೇಟಿ ಮಾಡಿದ ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕೂಡಾ ಶುಭ ಹಾರೈಸಿದ್ದಾರೆ.
ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಅವರ ಪತ್ನಿ ಶಿಲ್ಪಾ ಶೆಟ್ಟರ್ ಮತ್ತು ರಾಜನಾಥ್ ಸಿಂಗ್ ಅವರು ಅಡ್ವಾಣಿ ಅವರಿಗೆ ಶಾಲು ಹೊದೆಸಿ ಪುಷ್ಪಗುಚ್ಛ ನೀಡಿ ಶುಭ ಹಾರೈಸಿದರು.













Click it and Unblock the Notifications