ಜ.15ರೊಳಗೆ ಮೊದಲ ಪಟ್ಟಿ ಸಿದ್ಧ : ಸದಾನಂದ

ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೇತೃತ್ವ ನಾನೇ ವಹಿಸುತ್ತಿದ್ದೇನೆ. ಮಂಡ್ಯ, ಚಾಮರಾಜನಗರ, ಕೊಡುಗು, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪ್ರವಾಸ ನಡೆಸಿ ಪ್ರಮುಖ ಕಾರ್ಯಕರ್ತರನ್ನು ಭೇಟಿ ಮಾಡಿ ಸಲಹೆ ಪಡೆದು ಸಮಾಲೋಚನೆ ನಡೆಸುತ್ತೇನೆ ಎಂದು ಸದಾನಂದ ಗೌಡ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಪ್ರವಾಸ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದು ಸಲಹೆ, ಸೂಚನೆಗಳನ್ನು ಪಡೆಯಲಾಗುವುದು. ಇಲ್ಲಿನ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಡಿ.29ರಂದು ನಡೆಯಲಿರುವ ಸಮಾಲೋಚನಾ ಸಭೆಯಲ್ಲಿ ನಡೆದು, ಡಿ.30ರಂದು ಅಭ್ಯರ್ಥಿಗಳ ಹೆಸರು ಅಂತಿಮಗೊಳ್ಳಲಿದೆ ಎಂದು ಸದಾನಂದ ಗೌಡ ಹೇಳಿದರು.
ಪ್ರವಾಸ ಪರ್ವ: ಕೆಜೆಪಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಕೈಗೊಳ್ಳುವ ಮುನ್ನ ಬಿಜೆಪಿ ಕೂಡಾ ಪ್ರತಿತಂತ್ರ ರೂಪಿಸುತ್ತಿದೆ. ರಾಜ್ಯದಲ್ಲಿ ಒಟ್ಟು ಐದು ತಂಡಗಳು ಜಿಲ್ಲಾ ಮಟ್ಟದಲ್ಲಿ ಪ್ರವಾಸ ನಡೆಸಲಿವೆ.
ಪ್ರಥಮ ಪಟ್ಟಿಯ ಬಿಡುಗಡೆಯ ಒಂದು ತಿಂಗಳೊಳಗೆ ಉಳಿದ ಅಭ್ಯರ್ಥಿಗಳ ಹೆಸರುಗಳನ್ನೊಳಗೊಂಡ ಪಟ್ಟಿ ಬಿಡುಗಡೆಯಾಗಲಿದೆ ಬಿಜೆಪಿಯಲ್ಲಿದ್ದ ಆಂತರಿಕ ಬಿಕ್ಕಟ್ಟು ಕೊನೆಗೊಂಡಿದೆ. ಪ್ರಸ್ತುತ ರಾಜ್ಯದಲ್ಲಿ ಅಧಿಕೃತ ವಿರೋಧ ಪಕ್ಷಗಳು ತಮ್ಮ ಕಾರ್ಯ ನಿರ್ವಹಿಸುವಲ್ಲಿ ವಿಫಲವಾಗಿವೆ ಎಂದು ಸದಾನಂದ ಗೌಡ ಹೇಳಿದರು.
ಕಾಂಗ್ರೆಸ್ ಏಳಿಗೆ ಇಲ್ಲ: ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷಗಳು ಪಲಾಯನ ಮಾಡಿದ್ದು, 19 ಪ್ರಮುಖ ವಿಧೇಯಕಗಳು ಮಂಡನೆಯಾಗಿದ್ದರೂ ಚರ್ಚೆಗೆ ಬರಲಿಲ್ಲ ಎಂದು ಟೀಕಿಸಿದರು. ಬಿಜೆಪಿಯಲ್ಲಿನ ಆಂತರಿಕ ಗೊಂದಲದಿಂದ ತಮಗೆ ಲಾಭವಾಗಬಹುದು ಎಂಬುದು ವಿರೋಧ ಪಕ್ಷಗಳ ಆಲೋಚನೆಯಾಗಿತ್ತು. ಹಾಗಾಗಿ ಎಸ್.ಎಂ.ಕೃಷ್ಣರನ್ನು ರಾಜ್ಯಕ್ಕೆ ಕರೆಸಿಕೊಂಡ ಕಾಂಗ್ರೆಸ್ ಆಮೇಲೆ ಮೆತ್ತಗೆ ಅವರನ್ನು ವಿದೇಶಕ್ಕೆ ಕಳುಹಿಸಿದೆ.
ಈ ನಡುವೆ ಸಿದ್ದರಾಮಯ್ಯ ಮತ್ತು ಜಿ.ಪರಮೇಶ್ವರರ ನಡುವೆ ಕಚ್ಚಾಟ ಮುಂದುವರಿದಿದೆ ಎಂದು ಕಟಕಿಯಾಡಿದ ಡಿವಿ, ಆದರೆ ನಮ್ಮಿಂದ ಹೊರಗೆ ಹೋದ ಶಾಸಕರು ನಮ್ಮ ಜೊತೆಯೇ ಇದ್ದಾರೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ನಾನು ಸ್ಪರ್ಧಿಸುವ ಬಗ್ಗೆ ಆಲೋಚಿಸಿಲ್ಲ. ಪಕ್ಷ ಅಪೇಕ್ಷಿಸಿದಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿದರು.












Click it and Unblock the Notifications