ಶಿಂಧೆ RSS ವಿರೋಧಿ ಹೇಳಿಕೆ: ಇಂದು ಪ್ರತಿಭಟನೆ

ಭಯೋತ್ಪಾದನೆ ಕೃತ್ಯಗಳಲ್ಲಿ ಆರ್ ಎಸ್ಎಸ್ ಹಾಗೂ ಅದರ ಸಹ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದಾರೆ ಎಂಬ ಶೀಂಧೆ ಹೇಳಿಕೆ ಸುಳ್ಳು. ಯಾವುದೇ ದಾಖಲೆಯಿಲ್ಲದೆ ಆರೋಪ ಮಾಡುವುದರ ಜತೆಗೆ RSS ವರ್ಚಸ್ಸಿಗೆ ಮಸಿ ಬಳಿಯುವ ಯತ್ನ ಗೃಹ ಸಚಿವರಿಂದಲೇ ನಡೆದಿರುವುದನ್ನು ಪಕ್ಷ ಖಂಡಿಸುತ್ತದೆ ಎಂದು ಮೇಲ್ಮನೆ ಸದಸ್ಯ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ದೇಶಾದ್ಯಂತ ಪ್ರತಿಭಟನೆ:
ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರ ಹೇಳಿಕೆಯ ವಿರುದ್ಧ ಗುರುವಾರ ರಾಷ್ಟ್ರಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷ ರಾಜನಾಥ್ ಸಿಂಗ್ ಬುಧವಾರ ಹೇಳಿದ್ದಾರೆ.
ಅಧಿಕೃತವಾಗಿ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ರಾಜ್ನಾಥ್ ಸಿಂಗ್, ಬಿಜೆಪಿ ಹಿಂದೂ ಭಯೋತ್ಪಾದಕರ ತರಬೇತಿ ಶಿಬಿರ ನಡೆಸುತ್ತಿದೆ ಎಂದಿದ್ದ ಶಿಂಧೆ ಹೇಳಿಕೆ ವಿರುದ್ಧ ಕಿಡಿ ಕಾರಿದರು. ಅಲ್ಲದೆ ಕಾಂಗ್ರೆಸ್ ವಿರುದ್ಧ ನಾಳೆ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಶಿಂಧೆ ಅವರ ಹೇಳಿಕೆಗೆ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಇಲ್ಲವಾದರೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಎಚ್ಚರಿಸಿದ ಅವರು, ಶಿಂಧೆ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳದೇ ಅದನ್ನು ಕಾಂಗ್ರೆಸ್ ಸಮರ್ಥಿಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ವಕ್ತಾರ ಶಹನವಾಜ್ ಹುಸ್ಸೇನ್ ಅವರು ಮಾತನಾಡಿ, ಶಿಂಧೆ ಅವರ ಹೇಳಿಕೆ ಪಾಕಿಸ್ತಾನದ ಭಯೋತ್ಪಾದಕರನ್ನು ಪ್ರಚೋದಿಸಿದಂತಿದೆ. ಇಂತಹ ಹೇಳಿಕೆಯಿಂದ ಉಗ್ರರಿಗೆ ರೆಕ್ಕೆ ಬಂದಂತಾಗುತ್ತದೆ. ಆದ್ದರಿಂದ ಶಿಂಧೆ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ಶಿಂಧೆ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಕ್ಷ್ಯವಿದ್ದಲ್ಲಿ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಹೀಗೆ ಆಕ್ಷೇಪಾರ್ಹ ಹೇಳಿಕೆ ನೀಡುವುದು ತರವಲ್ಲ. ಇದು ಶಿಂಧೆ ಅವರಲ್ಲಿ ಪ್ರೌಢಿಮೆಯ ಕೊರತೆಯನ್ನು ಎತ್ತಿತೋರಿಸುತ್ತದೆ ಎಂದು ನಿತೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.












Click it and Unblock the Notifications