ರಾಹುಲ್, ರಾಜೇಶ್, ಬಿ ಜಯಶ್ರೀಗೆ ಪದ್ಮ ಪ್ರಶಸ್ತಿ
ಕರ್ನಾಟಕದಿಂದ ಪದ್ಮ ವಿಭೂಷಣ ಪ್ರಶಸ್ತಿಗೆ ಖ್ಯಾತ ವಿಜ್ಞಾನಿ ಪ್ರೊ.ರೊದ್ದಂ ನರಸಿಂಹ ಮತ್ತು ಪದ್ಮಭೂಷಣ ಪ್ರಶಸ್ತಿಗಳಿಗೆ ವಿಜ್ಞಾನಿ ಡಾ. ಬಿ.ಎನ್. ಸುರೇಶ್, ಕಲಾತ್ಮಕ ಕ್ರಿಕೆಟ್ ಆಟಗಾರ ರಾಹುಲ್ ದ್ರಾವಿಡ್, ಪದ್ಮಶ್ರೀ ಪ್ರಶಸ್ತಿಗಳಿಗೆ ರಂಗಕರ್ಮಿ ಬಿ. ಜಯಶ್ರೀ, ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಅಜಯ್ ಕೆ. ಸೂದ್, ಕೃಷ್ಣಸ್ವಾಮಿ ವಿಜಯ ರಾಘವನ್, ಮತ್ತು ಲಂಡನ್ ಪ್ಯಾರಾಲಿಂಪಿಕ್ಸ್ನಲ್ಲಿ ಹೈಜಂಪ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಗಿರೀಶ್ ಹೊಸನಗರ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಒಟ್ಟು 4 ಪದ್ಮ ವಿಭೂಷಣ, 24 ಪದ್ಮ ಭೂಷಣ ಮತ್ತು 80 ಪದ್ಮಶ್ರೀ ಪ್ರಶಸ್ತಿಗಳನ್ನು ಕಲೆ, ಸಾಮಾಜಿಕ ಕಾರ್ಯ, ಸಾರ್ವಜನಿಕ ವ್ಯವಹಾರ, ವಿಜ್ಞಾನ ಮತ್ತು ಇಂಜಿನಿಯರಿಂಗ್, ವೈದ್ಯಕೀಯ, ಉದ್ಯಮ, ಸಾಹಿತ್ಯ, ಶಿಕ್ಷಣ, ಕ್ರೀಡೆ, ನಾಗರಿಕ ಸೇವೆ ಮುಂತಾದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುವುದು. ಪ್ರತಿವರ್ಷ ಗಣರಾಜ್ಯೋತ್ಸವದ ಹಿಂದಿನ ದಿನ ಈ ಪ್ರಶಸ್ತಿಗಳನ್ನು ಪ್ರಕಟಿಸಲಾಗುವುದು. ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ರಾಷ್ಟ್ರಪತಿ ಭವನದಲ್ಲಿ ಆಯೋಜಿಸುವ ವರ್ಣರಂಜಿತ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಇತರ ಪ್ರಮುಖರೆಂದರೆ, ಬಾಲಿವುಡ್ ನಟಿ ಶ್ರೀದೇವಿ ಕಪೂರ್, ಓಲಿಂಪಿಕ್ಸ್ ಪದಕ ವಿಜೇತರಾದ ಸುಬೇದಾರ್ ಮೇಜರ್ ವಿಜಯ್ ಕುಮಾರ್, ಯೋಗೇಶ್ವರ್ ದತ್ತ. 11 ಅನಿವಾಸಿ ಭಾರತೀಯರು ಮತ್ತು ವಿದೇಶಿಯರು ಪ್ರಶಸ್ತಿ ಪಡೆದವರ ಪಟ್ಟಿಯಲ್ಲಿದ್ದಾರೆ.