ಕೃಷ್ಣರಿಗೆ ರಾಹುಲ್ ರಿಂದ ಗ್ರೀನ್ ಸಿಗ್ನಲ್ ಸಿಕ್ಕಿತೇ?

ದೆಹಲಿಯ ತುಘಲಕ್ ಲೇನ್ ನಲ್ಲಿರುವ ರಾಹುಲ್ ಗಾಂಧಿ ನಿವಾಸದಲ್ಲಿ ಮಾಜಿ ಕೇಂದ್ರ ಸಚಿವ ಎಸ್.ಎಂ ಕೃಷ್ಣ ಅವರು ರಾಹುಲ್ ಗಾಂಧಿ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಸುದೀರ್ಘ ಮಾತುಕತೆ ನಡೆಸಿದ್ದಾರೆ.
ಆದರೆ, ಕರ್ನಾಟಕದಲ್ಲಿ ಚುನಾವಣೆಯನ್ನು ಯಾರ ನೇತೃತ್ವದಲ್ಲಿ ಎದುರಿಸಬೇಕು ಎಂಬುದರ ಬಗ್ಗೆ ಇನ್ನೂ ಸ್ಪಷ್ಟವಾಗಿ ಸಿಗ್ನಲ್ ಸಿಕ್ಕಿಲ್ಲ. ಅಲ್ಲದೆ, ಅವಧಿಗೆ ಮುನ್ನ ಚುನಾವಣೆ ಸಂಭವಿಸುವ ಎಲ್ಲಾ ಲಕ್ಷಣಗಳು ಕಂಡು ಬಂದಿರುವುದರಿಂದ ಕಾಂಗ್ರೆಸ್ ಯಾವ ರೀತಿ ನಡೆ ಇಡಬೇಕು ಎಂಬುದರ ಬಗ್ಗೆ ಹೆಚ್ಚಿನ ಚರ್ಚೆ ನಡೆದಿದೆ.
ಜಗದೀಶ್ ಶೆಟ್ಟರ್ ಸರ್ಕಾರ ಬಹುಮತ ಸಾಬೀತು ಪಡಿಸುವಂತೆ ಆಗ್ರಹಿಸುವುದು, ಸರ್ಕಾರ ಉರುಳಲಿ, ಸ್ಥಿರವಾಗಲಿ ಚುನಾವಣೆಗೆ ಪ್ರಥಮ ಆದ್ಯತೆ ನೀಡುವುದು ಮುಖ್ಯ ಎಂದು ರಾಹುಲ್ ಕಿವಿ ಮಾತು ಹೇಳಿದ್ದಾರೆ.
ಟಿಕೆಟ್ ಗೊಂದಲ ಪರಿಹರಿಸಿ, ಯುವಕರಿಗೆ, ಮೂಲ ಕಾಂಗ್ರೆಸ್ಸಿಗರಿಗೆ ಆದ್ಯತೆ ಮೇರೆಗೆ ಟಿಕೆಟ್ ಹಂಚುವಂತೆ ಸೂಚನೆ ನೀಡಲಾಗಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲು ಸಿದ್ಧತೆ ನಡೆಸಿದೆ ಎಂದು ತಿಳಿದು ಬಂದಿದೆ.
ಜಾತಿ ಧರ್ಮಗಳ, ವೋಟ್ ಬ್ಯಾಂಕ್ ಆಧಾರದ ಮೇಲೆ ಯಾರಿಗೆ ಟಿಕೆಟ್ ನೀಡಬೇಕು ಎಂಬುದರ ಬಗ್ಗೆ ನಿರ್ಧರಿಸುವ ಅಧಿಕಾರ ಕೃಷ್ಣ ಅವರಿಗೆ ನೀಡಲು ರಾಹುಲ್ ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಕೃಷ್ಣ ಅವರು ಮಾತ್ರ ಯಾವುದರ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ನಾನು ಜೈಪುರದ ಕಾರ್ಯಕಾರಿ ಸಮಾರಂಭಕ್ಕೆ ಹೋಗಿರಲಿಲ್ಲ. ಪಕ್ಷದ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ರಾಹುಲ್ ಗಾಂಧಿ ಅವರನ್ನು ಅಭಿನಂದಿಸಲು ಬಂದಿದ್ದೇನೆ. ಚುನಾವಣೆ ಬಗ್ಗೆ ಹೆಚ್ಚಿನ ಮಾತುಕತೆ ನಡೆದಿಲ್ಲ. ಇದು ಸೌಹಾರ್ದಯುತ ಭೇಟಿಯಾಗಿದ್ದು, ಪಕ್ಷ ಸಂಘಟನೆಯ ಕುರಿತು ಚರ್ಚೆ ನಡೆಸಲಾಯಿತು ಎಂದು ಕೃಷ್ಣ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ವಿವಿಧ ರಾಜ್ಯಗಳ ಉಸ್ತುವಾರಿ ಮುಖಂಡರು, ಯುವ ಕಾಂಗ್ರೆಸ್, ವಿದ್ಯಾರ್ಥಿ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರು, ಪದಾಧಿಕಾರಿಗಳ ಜೊತೆ ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ.
ಇತ್ತ ಕೆಪಿಸಿಸಿ ನಾಯಕರು ಕರಾವಳಿಯಲ್ಲಿ ಸಾಮರಸ್ಯ ನಡಿಗೆ ಪಾದಯಾತ್ರೆಯನ್ನು ಮುಂದುವರೆಸಿದ್ದಾರೆ. ಹೈ ಕಮಾಂಡ್ ನಿರ್ಧಾರ ಹೊರಬೀಳುವುದನ್ನೇ ಕಾದಿದ್ದಾರೆ. ಪ್ರಮುಖವಾಗಿ ಕಾಂಗ್ರೆಸ್ ನಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದು ಘೋಷಿಸಬೇಕಿದೆ ಹಾಗೂ ಚುನಾವಣೆ ನೇತೃತ್ವ ಯಾರಿಗೆ ವಹಿಸಬೇಕು ಎಂಬುದು ನಿರ್ಧಾರವಾಗಬೇಕಿದೆ.












Click it and Unblock the Notifications