ಬನ್ನಿ, ಜಗತ್ ಪ್ರಸಿದ್ಧ ಸುತ್ತೂರು ಜಾತ್ರೆಗೆ ಹೋಗೋಣ
ಪ್ರತಿವರ್ಷದಂತೆ ಈ ವರ್ಷವೂ ಸುತ್ತೂರಿನಲ್ಲಿ ಜಾತ್ರೆ ನಡೆಯಲಿದ್ದು, ಸಕಲ ಸಿದ್ಧತೆಗಳು ಸಮಾರೋಪಾದಿಯಲ್ಲಿ ಸಾಗುತ್ತಿದೆ. ಈಗಾಗಲೇ ಸುತ್ತೂರಿನಲ್ಲಿ ಜಾತ್ರೆಯ ಕಳೆಕಟ್ಟಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲದೆ ದೂರದೂರಿನಿಂದ ಲಕ್ಷಾಂತರ ಭಕ್ತರೂ ಜಾತ್ರೆಯ ಸಂಭ್ರಮದಲ್ಲಿ ಭಾಗಿಯಾಗಲು ತವಕಿಸುತ್ತಿದ್ದಾರೆ.
ಹಾಗೆ ನೋಡಿದರೆ ಸುತ್ತೂರಿನಲ್ಲಿ ನಡೆಯುವ ಜಾತ್ರೆ ಬರೀ ಜಾತ್ರೆಯಾಗಿರದೆ ಇದೊಂದು ಪರಂಪರೆ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಮಹೋತ್ಸವಗಳ ಸಂಗಮದೊಂದಿಗೆ ಗ್ರಾಮೀಣ ಸೊಗಡನ್ನು ಬಿಂಬಿಸುವ ಕಲೆಗಳ ಪ್ರದರ್ಶನ ಎಂದರೆ ತಪ್ಪಾಗಲಾರದು.
ಕಪಿಲ ನದಿ ದಡದಲ್ಲಿ ನೆಲೆನಿಂತಿರುವ ಸುತ್ತೂರು ಕ್ಷೇತ್ರದಲ್ಲಿ ನಡೆಯುವ ಜಾತ್ರೆ ಒಂದು ದಿನದಲ್ಲಿ ಮುಗಿದು ಹೋಗುವ ಜಾತ್ರೆಯಲ್ಲ. ಸುಮಾರು ಆರು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಆರೋಗ್ಯ ಮೇಳ, ಕೃಷಿ ಮೇಳ, ಉತ್ಪಾದಕ ಮತ್ತು ಗ್ರಾಹಕ ಮೇಳ, ಕ್ರೀಡಾ ಮೇಳ, ಸಾಂಸ್ಕೃತಿಕ ಮೇಳ, ಶೈಕ್ಷಣಿಕ ಮೇಳ, ಸಾಹಿತ್ಯ ಮತ್ತು ಪುಸ್ತಕ ಮೇಳ, ಸರ್ವಧರ್ಮ ಸಮ್ಮಿಲನ, ಸಾಮೂಹಿಕ ವಿವಾಹ, ವಿವಿಧ ವಸ್ತು ಪ್ರದರ್ಶನಗಳು, ದನಗಳ ಜಾತ್ರೆ, ಜಾನಪದ ಜಾತ್ರೆ, ಕುಸ್ತಿ ಪಂದ್ಯಾವಳಿ, ನಗೆ ಉತ್ಸವ, ನಾಟಕ, ನೃತ್ಯ, ವಚನಗಾಯನ, ಸುಗಮ ಸಂಗೀತ, ಯಕ್ಷಗಾನ... ಹೀಗೆ ಎಲ್ಲಾ ರೀತಿಯ ಕಾರ್ಯಕ್ರಮಗಳು ಇಲ್ಲಿ ನಡೆಯಲಿವೆ. [ಪುಣ್ಯಕ್ಷೇತ್ರದ ಮಹಿಮೆಯ ಕಥೆ]
ಆರು ದಿನಗಳ ಸುತ್ತೂರು ಜಾತ್ರೆ
ಸುತ್ತೂರು ಜಾತ್ರೆಯು ಸುಮಾರು ಆರು ದಿನಗಳ ಕಾಲ(ಫೆಬ್ರವರಿ 6ರಿಂದ 11ರವರೆಗೆ) ನಡೆಯಲಿದ್ದು, ಒಂದೊಂದು ದಿನವೂ ಒಂದೊಂದು ರೀತಿಯ ವಿಶೇಷತೆಯಿರುತ್ತದೆ. ಸುತ್ತೂರಿನ ಶ್ರೀಮಠದಿಂದ ಆದಿಜಗದ್ಗುರು ಶಿವಯೋಗಿಗಳ ಉತ್ಸವಮೂರ್ತಿಯನ್ನು ಕರ್ತೃಗದ್ದುಗೆಗೆ ತರುವುದರೊಂದಿಗೆ ಜಾತ್ರೆ ಆರಂಭಗೊಳ್ಳಲಿದೆ.
ಸಹಸ್ರ ಕುಂಭೋತ್ಸವ ಮತ್ತು ರಥೋತ್ಸವ
ಜಾತ್ರೆಯ ಎರಡನೇ ದಿನ ಸಹಸ್ರಕುಂಭೋತ್ಸವ ನಡೆದರೆ, ಮೂರನೇ ದಿನದಂದು ಬೆಳಿಗ್ಗೆ ರಥೋತ್ಸವ ನಡೆಯುತ್ತದೆ. ನಾಲ್ಕನೇ ದಿನದಂದು ಸಂಜೆ ನಡೆಯುವ ಶ್ರೀ ಮಹದೇಶ್ವರ ಕೊಂಡೋತ್ಸವ ಮತ್ತು ಮುತ್ತಿನ ಪಲ್ಲಕ್ಕಿ ಉತ್ಸವ ಗಮನಸೆಳೆಯುತ್ತದೆ.
ಲಕ್ಷದೀಪೋತ್ಸವ ಹಾಗೂ ತೆಪ್ಪೋತ್ಸವ
ಐದನೇ ದಿನ ರಾತ್ರಿ ಲಕ್ಷದೀಪೋತ್ಸವ ಹಾಗೂ ತೆಪ್ಪೋತ್ಸವ, ಆರನೇ ದಿನ ಅನ್ನ ಬ್ರಹ್ಮೋತ್ಸವ, ಶ್ರೀ ವೀರಭದ್ರೇಶ್ವರ ಕೊಂಡೋತ್ಸವಗಳು ನಡೆಯುತ್ತವೆ.
ನೋಡುವುದೇ ಕಣ್ಣಿಗೊಂದು ಹಬ್ಬ
ಜಾತ್ರೆಯ ಸಂದರ್ಭ ನಡೆಯುವ ಕಲಾತಂಡಗಳ ಮೆರವಣಿಗೆ ಛತ್ರಿ, ಚಾಮರ, ಸೂರಾಪಾನಿ, ಗಾರುಡಿಗೊಂಬೆ, ಮರಗಾಲು ಕುಣಿತ, ನೃತ್ಯ, ವೀರಗಾಸೆ, ಡೊಳ್ಳು ಹಾಗೂ ಪೂಜಾ ಕುಣಿತ, ಕರಡಿ ಮೇಳ, ನಾದಸ್ವರ ಸೇರಿ ವಿವಿಧ ಜನಪದ ಕಲಾತಂಡಗಳೊಂದಿಗೆ ಸಾಗುತ್ತಿದ್ದರೆ ಅದನ್ನು ನೋಡುವುದೇ ಕಣ್ಣಿಗೊಂದು ಹಬ್ಬವಾಗುತ್ತದೆ.
ತ್ರಿಕಾಲ ಪೂಜೆ, ಮಹಾರುದ್ರಾಭಿಷೇಕ
ಇನ್ನು ಜಾತ್ರೆಯ ಸಂದರ್ಭ ಶ್ರೀ ಕ್ಷೇತ್ರದಲ್ಲಿರುವ ಕರ್ತೃಗದ್ದುಗೆ ಮತ್ತು ಪುರಾಣ ಪ್ರಸಿದ್ಧ ದೇವಾಲಯಗಳಾದ ಶ್ರೀ ಸೋಮೇಶ್ವರ, ಶ್ರೀ ಮಹದೇಶ್ವರ, ಶ್ರೀ ಶಂಕರನಾರಾಯಣ, ಶ್ರೀ ವೀರಭದ್ರೇಶ್ವರ, ಶ್ರೀ ನಾರಾಯಣಸ್ವಾಮಿ ದೇವಾಲಯಗಳಲ್ಲಿ ತ್ರಿಕಾಲ ಪೂಜೆ, ಮಹಾರುದ್ರಾಭಿಷೇಕ, ನವನೀತಾಲಂಕಾರ, ಹಸಿರುವಾಣಿ ಅಲಂಕಾರ ಹಾಗೂ ಗುರುಪರಂಪರೆಯ ಸಂಸ್ಮರಣೋತ್ಸವಗಳು ಕೂಡ ನಡೆಯುತ್ತವೆ.