ಮಾತುಕತೆ ವಿಫಲ, ಮುಗಿಯದ ರೋಗಿಗಳ ಪರದಾಟ

ಬೆಂಗಳೂರಿನ ವಿಕಾಸಸೌಧದಲ್ಲಿ ಸೋಮವಾರ ಮುಷ್ಕರ ನಿರತ ವೈದ್ಯರ ಹಿತರಕ್ಷಣಾ ಸಂಘದ ಅಧ್ಯಕ್ಷ ಡಾ.ಎಸ್.ರವೀಂದ್ರ ಅವರೊಂದಿಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಅರವಿಂದ ಲಿಂಬಾವಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಮದನ್ ಗೋಪಾಲ್ ನಡೆಸಿದ ಸಂಧಾನ ಮಾತುಕತೆ ಮುರಿದು ಬಿದ್ದಿದೆ.
ಸರ್ಕಾರಿ ಆಸ್ಪತ್ರೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪರವಾಗಿ ಕೇವಲ ಐದು ಮಂದಿ ಪದಾಧಿಕಾರಿಗಳಿಗೆ ಮಾತ್ರ ಸಭೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿತ್ತು. ಸಭೆಯಲ್ಲಿ ಇಲಾಖೆ ಆಯುಕ್ತ ಮದನ್ ಗೋಪಾಲ್ ಸಂಘದ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕೈಗೊಂಡ ಕ್ರಮಗಳನ್ನು ವಿವರಿಸಿದರು.
ಇದರಿಂದ ಕೋಪಗೊಂಡ ವೈದ್ಯರ ಹಿತರಕ್ಷಣಾ ಸಂಘದ ಸದಸ್ಯರು ಸಭೆಯಿಂದ ಹೊರನಡೆದರು. ಸರ್ಕಾರ ಮತ್ತು ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಭೆಯ ನಂತರ ಮಾತನಾಡಿದ ಎಸ್.ರವೀಂದ್ರ ಸರ್ಕಾರ ವೈದ್ಯರನ್ನು ಮಾತುಕತೆಗೆ ಆಹ್ವಾನಿಸಿರಲಿಲ್ಲ.ನಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕಲು ಆಹ್ವಾನಿದ್ದರು ಎಂದು ಆರೋಪಿಸಿದರು.
ಸಭೆಯಲ್ಲಿ ವೈದ್ಯರ ಅಭಿಪ್ರಾಯವನ್ನು ಮಂಡಿಸಲು ಅವಕಾಶ ನೀಡಲಿಲ್ಲ. ನಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾದರೆ ಸಾಮೂಹಿಕ ರಾಜೀನಾಮೆ ನೀಡಲು ಸಿದ್ಧವಿರುವುದಾಗಿ ಘೋಷಿಸಿದರು. ನಾವು ಬದ್ಧತೆಯಿಂದ ಕಾರ್ಯನಿರ್ವಹಿಸುತ್ತೇವೆ. ರೋಗಿಗಳ ಬಗ್ಗೆ ನಮಗೂ ಕಾಳಜಿ ಇದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಷ್ಕರ ಮುಂದುವರೆಸುವ ಬಗ್ಗೆ ಪದಾಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸಭೆಯ ಬಳಿಕ ಮಾತನಾಡಿದ ಸಚಿವ ಅರವಿಂದ ಲಿಂಬಾವಳಿ, ಸರ್ಕಾರ ವೈದ್ಯರ ಬೇಡಿಕೆಗಳನ್ನು ಈಡೇರಿಸಲು ಸಿದ್ಧವಿದೆ. ವೈದ್ಯಕೀಯ ಶಿಕ್ಷಣ ವ್ಯಾಪ್ತಿಯಲ್ಲಿನ 10 ಜಿಲ್ಲಾ ಆಸ್ಪತ್ರೆಗಳನ್ನು ಆರೋಗ್ಯ ಇಲಾಖೆ ವ್ಯಾಪ್ತಿಗೆ ತರುವ ಬೇಡಿಕೆಯನ್ನು ಉಪಮುಖ್ಯಮಂತ್ರಿ ಅಧ್ಯಕ್ಷತೆಯ ಸುಂಪುಟ ಉಪ ಸಮಿತಿಯಲ್ಲಿ ಪರಿಶೀಲನೆ ನಡೆಸುತ್ತೇವೆ. ವೈದ್ಯರು ಪ್ರತಿಷ್ಠೆ ಬದಿಗಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮನವಿ ಮಾಡಿದರು.
ವೈದ್ಯರ ಬೇಡಿಕೆಗಳೇನು?
* ವೈದ್ಯಕೀಯ ಶಿಕ್ಷಣ ಇಲಾಖೆಗೆ ವಹಿಸಿರುವ ಜಿಲ್ಲಾ ಆಸ್ಪತ್ರೆಗಳನ್ನು ಆರೋಗ್ಯ ಇಲಾಖೆಗೆ ಹಿಂಪಡೆಯಬೇಕು.
* ಇಲಾಖೆ ರೂಪಿಸಿರುವ ವರ್ಗಾವಣೆ ಕಾಯಿದೆಗೆ ಸೂಕ್ತ ತಿದ್ದುಪಡಿ ತರಬೇಕು.
* ಆರೋಗ್ಯ ಇಲಾಖೆ ಎಲ್ಲಾ ವೃಂದದ ಸಿಬ್ಬಂದಿಗೆ ತಿಂಗಳ ಮೊದಲ ದಿನವೇ ವೇತನ ಪಾವತಿಸಬೇಕು.












Click it and Unblock the Notifications