ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಆಯೋಗ ಸಜ್ಜು

ರಾಜ್ಯದ 208 ಸ್ಥಳೀಯ ಸಂಸ್ಥೆಗಳಿಗೆ 2007ರ ಮೀಸಲಾತಿ ಪಟ್ಟಿಯಂತೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಇತ್ತೀಚೆಗೆ ಆದೇಶಿಸಿತ್ತು. ಸುಪ್ರೀಂ ಆದೇಶ ಪಾಲನೆಗೆ ಮುಂದಾಗಿರುವ ಚುನಾವಣಾ ಆಯೋಗ ಜಿಲ್ಲಾಧಿಕಾರಿಗಳಿಂದ ಮೀಸಲಾತಿ ಪಟ್ಟಿ ಪಡೆದು ಚುನಾವಣಾ ಕಾರ್ಯ ಪ್ರಾರಂಭಿಸಿದೆ. ಮೊದಲ ಹಂತವಾಗಿ 80 ವೀಕ್ಷಕರನ್ನು ನಿಯೋಜಿಸಿ ನಾಲ್ಕು ದಿನಗಳಲ್ಲಿ ಅಧಿಸೂಚನೆ ಹೊರಡಿಸಲು ಸಜ್ಜಾಗಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಆಡಳಿತಾರೂಢ ಬಿಜೆಪಿ ಸೇರಿದಂತೆ ಯಾವ ಪಕ್ಷಗಳು ತಯಾರಿಲ್ಲ. 2001 ಮತ್ತು 2007 ಮೀಸಲಾತಿ ಪಟ್ಟಿಯಂತೆ ಚುನಾವಣೆ ನಡೆಸಿದರೆ, ಹಿಂದುಳಿದ ಹಾಗೂ ಎಸ್ ಸಿ ಹಾಗೂ ಎಸ್ ಟಿ ವರ್ಗಗಳಿಗೆ ಅನ್ಯಾಯವಾಗುತ್ತದೆ. ಅಲ್ಲದೆ ಸದ್ಯದಲ್ಲಿಯೆ ಶಾಲೆಗಳ ಪರೀಕ್ಷೆಗಳು ಪ್ರಾರಂಭವಾಗಲಿದ್ದು ಶಿಕ್ಷಕರು ಪರೀಕ್ಷೆ ಕಾರ್ಯದಲ್ಲಿ ತೊಡಗಿರುವುದರಿಂದ ಚುನಾವಣೆ ನಡೆಸಿದರೆ ಮಕ್ಕಳಿಗೆ ತೊಂದರೆ ಆಗುತ್ತದೆ ಎಂದು ಸರ್ಕಾರ ಹೇಳುತ್ತಿದೆ.
ಮೇನಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಆದ್ದರಿಂದ ಮಿನಿ ಮತಸಮರ ಎಂದೇ ಬಿಂಬಿಸಲಾಗುತ್ತಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಿ ತಮ್ಮ ಕೇತ್ರಗಳಲ್ಲಿ ಪ್ರಾಬಲ್ಯ ಕಳೆದುಕೊಳ್ಳಲು ರಾಜಕೀಯ ಪಕ್ಷಗಳು ತಯಾರಿಲ್ಲ. ಚುನಾವಣೆ ನಿಗದಿಯಾದರೆ ಟಿಕೆಟ್ ಹಂಚಿಕೆ ಗೊಂದಲ, ಚುನಾವಣಾ ವೆಚ್ಚ, ಅಭ್ಯರ್ಥಿಗಳ ಪಕ್ಷಾಂತರದ ಸುಳಿವು ಅರಿತಿರುವ ಪಕ್ಷಗಳು ಆದಷ್ಟು ದಿನ ಚುನಾವಣೆ ಮುಂದೂಡುವ ರಣತಂತ್ರ ರಚಿಸಿದ್ದವು.
ಇದರ ಭಾಗವಾಗಿಯೇ ಫೆ.4ರಿಂದ ಪ್ರಾರಂಭವಾದ ವಿಧಾನ ಮಂಡಲ ಕಪಾಪದಲ್ಲಿ ರಾಜ್ಯ ಚುನಾವಣಾ ಆಯುಕ್ತ ಸಿ.ಆರ್. ಚಿಕ್ಕಮಠ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಪಕ್ಷಗಳು ತಯಾರಿ ನಡೆಸಿದ್ದವು. ಆದರೆ, ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದ ಚುನಾವಣಾ ಆಯೋಗ ಸುಪ್ರೀಂಕೋರ್ಟ್ ಆದೇಶ ಪಾಲನೆಯಂತೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಆಡಳಿತ ಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷಗಳ ಮುಂದಿನ ನಡೆ ಏನು? ಎಂಬುದು ಸದ್ಯ ಕುತೂಹಲ ಮೂಡಿಸಿದೆ.
ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ : ಸರ್ಕಾರ 2007ರ ಮೀಸಲಾತಿಯಂತೆ ಚುನಾವಣೆ ನಡೆಸಿದರೆ ಹಿಂದುಳಿದ ಹಾಗೂ ಎಸ್ ಸಿ ಹಾಗೂ ಎಸ್ ಟಿ ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ಹೇಳಿದೆ. ಆದರೆ, ರಾಜ್ಯ ಚುನಾವಣಾ ಆಯೋಗದ ಆಯುಕ್ತ ಚಿಕ್ಕಮಠ 2007ರ ಮೀಸಲಾತಿ ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಸರ್ಕಾರದ ನಿಲುವನ್ನು ಪರಿಗಣಿಸದೆ ಚುನಾವಣೆ ನಡೆಸಲು ಸಜ್ಜಾಗುತ್ತಿರುವ ರಾಜ್ಯ ಚುನಾವಣಾ ಆಯುಕ್ತ ಚಿಕ್ಕಮಠ ಕ್ರಮ ಪ್ರಶ್ನಿಸಿ ಕರ್ನಾಟಕ ದಲಿತ ಹಿಂದುಳಿದ ಸಂಘದ ಸದಸ್ಯರು ಸೋಮವಾರ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.












Click it and Unblock the Notifications