ಕಾವೇರಿ: ಇಂದು ರಾಜಧಾನಿಯಲ್ಲಿ ದೇವೇಗೌಡ ಪಾದಯಾತ್ರೆ
ಕಾವೇರಿ ವಿಚಾರದಲ್ಲಿ ರಾಜ್ಯಕ್ಕಾಗಿರುವ ಅನ್ಯಾಯ ಖಂಡಿಸಿ ಮಂಗಳವಾರ ದೇವೇಗೌಡರು ಪಾದಯಾತ್ರೆ ನಡೆಸಲಿದ್ದಾರೆ. ನಂತರ ಶಾಸಕಿ ಅನಿತಾ ಕುಮಾರಸ್ವಾಮಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ, ಮನವಿ ಪತ್ರ ಅರ್ಪಿಸಲಿದೆ ಎಂದು ಜೆಡಿಎಸ್ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ದೇವೇಗೌಡರ ಪಾದಯಾತ್ರೆ ಆರಂಭವಾಗಲಿದ್ದು ಪಕ್ಷದ ಸಂಸದರು, ಶಾಸಕರು, ಪಾಲಿಕೆ ಸದಸ್ಯರು ಭಾಗವಹಿಸಲಿದ್ದಾರೆ. ಮೈಸೂರು ಬ್ಯಾಂಕ್ ರಸ್ತೆಯಲ್ಲಿರುವ ಬನ್ನಪ್ಪ ಪಾರ್ಕ್ನಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಅವರು ಪಾದಯಾತ್ರೆ ನಡೆಸಲಿದ್ದಾರೆ. ಸ್ವಾತಂತ್ಯ ಉದ್ಯಾನದಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ಇತ್ತೀಚಿನ ದಿನಗಳಲ್ಲಿ 2ನೆಯ ಬಾರಿಗೆ ದೇವೇಗೌಡರು ಮುಖ್ಯಮಂತ್ರಿ ಶೆಟ್ಟರ್ ಅವರನ್ನು ಭೇಟಿ ಮಾಡಿ ಕಾವೇರಿ ಕುರಿತು ಮಾತುಕತೆ ನಡೆಸಿದ್ದಾರೆ. ನಿನ್ನೆ ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾವೇರಿ ತೀರ್ಪು ಕುರಿತು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಉಭಯ ನಾಯಕರು ಸಮಾಲೋಚನೆ ನಡೆಸಿದರು ಎಂದು ತಿಳಿದುಬಂದಿದೆ.