ಪಂಚ ನಾಯಕರ ನೇತೃತ್ವದಲ್ಲಿ ಬಿಜೆಪಿ ರಥಯಾತ್ರೆ

ಮಂಗಳವಾರ ತಡರಾತ್ರಿಯವರೆಗೂ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಧರ್ಮೆಂದ್ರ ಪ್ರಧಾನ್, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ರಾಷ್ಟೀಯ ಪ್ರದಾನ ಕಾರ್ಯದರ್ಶಿ ಅನಂತ್ ಕುಮಾರ್, ಉಪ ಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ಮುಂತಾದವರು ಪಾಲ್ಗೊಂಡಿದ್ದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆಗಿಂತ ಮುಂಬರುವ ವಿಧಾನಸಭಾ ಚುನಾವಣೆಯ ತಯಾರಿಯ ಕುರಿತು ಚರ್ಚೆ ನಡೆಸಲಾಗಿದೆ. ಪಕ್ಷವನ್ನು ತಳ ಮಟ್ಟದಿಂದ ಸಂಘಟಿಸಲು ಮತ್ತು ಪಕ್ಷ ಬಿಟ್ಟು ಹೋಗುವ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ತಂತ್ರ ರೂಪಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸ್ಥಳೀಯ ಸಂಸ್ಥೆಗಳ ಅಭ್ಯರ್ಥಿಗಳ ಪಟ್ಟಿಯನ್ನು ಜಿಲ್ಲಾ ನಾಯಕರ ಜೊತೆ ಸಮಾಲೋಚನೆ ನಡೆಸಿ ಫೆ.21ರಂದು ಬಿಡುಗಡೆ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ. ಯಾವುದೇ ಪಕ್ಷದೊಂದಿಗೆ ಒಪ್ಪಂದ ಮಾಡಿಕೊಳ್ಳದೆ ಏಕಾಂಗಿಯಾಗಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಫೆ.23 ಅಥವ 24ರಂದು ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಾಣಾಳಿಕೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
ವಿಧಾನಸಭಾ ಸಿದ್ಧತೆಗಳು : ವಿಧಾನಸಭಾ ಚುನಾವಣೆಗೆ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿದ ಬಳಿಕ ಅಂದರೆ ಮಾರ್ಚ್ 8ರಿಂದ 10ವರೆಗೆ ಬೆಂಗಳೂರಿನಲ್ಲಿ ಜಿಲ್ಲಾ ಸಮಾವೇಶಗಳು ನಡೆಯಲಿವೆ. ಹಾಲಿ ಬಿಜೆಪಿ ಶಾಸಕರಿರುವ ಕ್ಷೇತ್ರಗಳನ್ನು ಹೊರತು ಪಡಿಸಿ, ಉಳಿದ ಕ್ಷೇತ್ರದ ಅಭ್ಯರ್ಥಿಗಳನ್ನು ಈ ಸಮಾವೇಶಗಳಲ್ಲಿ ಆಯ್ಕೆ ಮಾಡುವ ಸಂಭವವಿದೆ.
ಪಕ್ಷದ ರಾಷ್ಟೀಯ ಅಧ್ಯಕ್ಷ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಮಾ.13ರಂದು ಬೆಂಗಳೂರಿನಲ್ಲಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ಉಪ ಮುಖ್ಯಮಂತ್ರಿ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಂಸದ ಅನಂತ್ ಕುಮಾರ್ ಮುಂತಾದವರು ಕಾರ್ಯಕಾರಣಿಯಲ್ಲಿ ಭಾಗವಹಿಸಲಿದ್ದಾರೆ.
ರಥಯಾತ್ರೆಗಾಗಿ ಐದು ತಂಡ : ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ರಥಯಾತ್ರೆ ನಡೆಸಿ ಪಕ್ಷದ ಸಾಧನೆಯನ್ನು ಮತದಾರರಿಗೆ ತಲುಪಿಸಲು ಕಾರ್ಯತಂತ್ರ ರೂಪಿಸಲಾಗಿದೆ. ಇದಕ್ಕಾಗಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಅನಂತ್ ಕುಮಾರ್, ಡಿ.ವಿ.ಸದಾನಂದ ಗೌಡ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಲಾಗಿದೆ.
ಎಲ್ಲಾ ವಿಧಾನಸಭಾ ಕ್ಷೇತ್ರದ ರಥಯಾತ್ರೆ ಪೂರ್ಣಗೊಂಡ ಬಳಿಕ, ಮಾ.31ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಸುಮಾರು 10 ಲಕ್ಷ ಜನರು ಸಮಾವೇಶದಲ್ಲಿ ಭಾಗವಹಿಸುವಂತೆ ಮಾಡಿ ಪಕ್ಷದ ಬಲ ಪ್ರದರ್ಶನ ಮಾಡಲು ಯೋಜನೆ ರೂಪಿಸಲಾಗಿದೆ.












Click it and Unblock the Notifications