ಮುಂದಿನ ಸರ್ಕಾರ ನಮ್ಮದೇ ಅಂದ್ರು ಸಿದ್ದರಾಮಯ್ಯ

ಕೋಲಾರದಲ್ಲಿ ಶನಿವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಎಂದು ನಾವು ಯಾರಿಗೂ ಆಹ್ವಾನ ನೀಡಿಲ್ಲ. ಬಿಜೆಪಿ ನಾಯಕರ ವರ್ತನೆಗೆ ನೊಂದು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ವಲಸಿಗರಿಗೆ ಪಕ್ಷದಲ್ಲಿ ಆದ್ಯತೆ ನೀಡುವುದಿಲ್ಲ ಎಂದು ಕಡ್ಡಿಮುರಿದಂತೆ ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಕೂಡ ವಲಸಿಗರಿಗೆ ಟಿಕೆಟ್ ನೀಡುವುದಿಲ್ಲ ಎಂದು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ವಲಸಿಗರಿಗೆ ಪಕ್ಷದಲ್ಲಿ ಆದ್ಯತೆ ನೀಡುವುದಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರು ಕೂಡ ಜೆಡಿಎಸ್ನಿಂದ ಬಂದ ವಲಸಿಗರೆ.
ಆಡಳಿತ ನಡೆಸಲು ಬಾರದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಕಾವೇರಿ ವಿಚಾರ ಸೇರಿದಂತೆ ಯಾವಾಗಲೂ ಕೇಂದ್ರ ಸರ್ಕಾರ ರಾಜ್ಯದ ಜನರಿಗೆ ಅನ್ಯಾಯ ಮಾಡಿಲ್ಲ. ರಾಜ್ಯದ ನಾಯಕರ ಆರೋಪಗಳಲ್ಲಿ ಹುರುಳಿಲ್ಲ ಎಂದರು.
ಸ್ಥಳೀಯ ಮತ್ತು ವಿಧಾನಸಭಾ ಚುನಾವಣೆಗಳಿಗೆ ಕಾಂಗ್ರೆಸ್ ಸಿದ್ದವಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನ ಪಡೆಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಚುನಾವಣೆಯ ನಂತರ ಬಿಜೆಪಿಗೆ ರಾಜ್ಯದಲ್ಲಿ ಉಳಿಗಾಲವಿಲ್ಲ ಎಂದರು.












Click it and Unblock the Notifications